ಹೈದರಬಾದ್ : ಈ ತಿಂಗಳ 15ರಂದು ಭಾರತದ ವಿರುದ್ಧ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಕಣಕ್ಕಿಳಿಸಲು ಪಾಕಿಸ್ತಾನ ಸರ್ಕಾರ ಒಪ್ಪಿಗೆ ನೀಡಿದೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಆಡಲು ಒಪ್ಪಿಸಿದ ನಂತರ ಪಾಕ್ ಸರ್ಕಾರದಿಂದ ಈ ನಿರ್ಧಾರ ಹೊರಬಿದ್ದಿದೆ. ಆಟದ ಹಿತದೃಷ್ಟಿಯಿಂದ ಬಹಿಷ್ಕಾರ ನಿರ್ಧಾರ ದಿಂದ ಹಿಂದೆ ಸರಿಯುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (ಬಿಸಿಬಿ) ಮುಖ್ಯಸ್ಥ ಅಮಿನುಲ್ ಇಸ್ಲಾಂ ಅವರು ಪಾಕಿಸ್ತಾನಕ್ಕೆ ಮನವಿ ಮಾಡಿದ್ದರು.
ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸಾನಾಯಕೆ ಅವರೂ ಪಾಕಿಸ್ತಾನ ಪ್ರಧಾನಿ ಶಹಬಾಜ್ ಶರೀಫ್ ಅವರಿಗೆ ಕರೆ ಮಾಡಿ ಬಹಿಷ್ಕಾರದ ಕರೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಪಾಕ್ ಸರ್ಕಾರದ ನಿರ್ಧಾರ ಕೈಗೊಂಡಿದೆ. ಈ ಬೆಳವಣಿಗೆಯಿಂದಾಗಿ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಎ ಗುಂಪಿನ ಪಂದ್ಯವು ಕೊಲಂಬೊದಲ್ಲಿ ನಿಗದಿಯಂತೆ ನಡೆಯಲಿದೆ. ಬಿಸಿಬಿ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜೊತೆ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಬಿಗೆ ಯಾವುದೇ ಆರ್ಥಿಕ, ಕ್ರೀಡಾ ಅಥವಾ ಆಡಳಿತಾತ್ಮಕ ನಿರ್ಬಂಧ ವಿಧಿಸುವುದಿಲ್ಲ. ಮಾತುಕತೆಯ ಭಾಗವಾಗಿ 2028 ಮತ್ತು 2031ರ ನಡುವೆ ಐಸಿಸಿ ಟೂರ್ನಿಯೊಂದಕ್ಕೆ ಬಾಂಗ್ಲಾದೇಶ ಆತಿಥ್ಯವನ್ನೂ ವಹಿಸಲಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಭದ್ರತಾ ಕಳವಳಗಳನ್ನು ವ್ಯಕ್ತಪಡಿಸಿ ಬಾಂಗ್ಲಾದೇಶವು ಭಾರತಕ್ಕೆ ತನ್ನ ತಂಡವನ್ನು ಕಳುಹಿಸಲು ನಿರಾಕರಿಸಿತ್ತು. ಅದರ ಬದಲು ಸ್ಕಾಟ್ಲೆಂಡ್ ಅವಕಾಶ ಪಡೆದಿತ್ತು.