ಸುರತ್ಕಲ್: 13 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತ ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27). ಈತನ ವಿರುದ್ಧ ಕಳೆದ ವರ್ಷ ಮೀಲಾದುನ್ನಬಿ ಸಂದರ್ಭ ಕಾಟಿಪಳ್ಳ ಮೂರನೇ ಬ್ಲಾಕ್ನ ಮಸೀದಿಗೆ ಕಲ್ಲೆಸೆದ ಪ್ರಕರಣ, ಎಮ್ಮೆಕೆರೆ ನಿವಾಸಿ ರಾಹುಲ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ದಕ್ಷಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ (4 ಪ್ರಕರಣಗಳು), ಡಕಾಯಿತಿ, ಕಾನೂನುಬಾಹಿರ ಸಭೆ, ಹಲ್ಲೆ ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಒಟ್ಟು 13 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿವೆ.
ಆರೋಪಿ ಭರತ್ ಶೆಟ್ಟಿ ವಿರುದ್ಧದ ಕಾನೂನು ಕ್ರಮಗಳ ಹೊರತಾಗಿಯೂ ಈತ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರೆಸಿದ್ದು, ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತಿದ್ದಾನೆ.
ಕಾಳಧನಿಕರು, ಮಾದಕ ವ್ಯಸನಿಗಳು, ಜೂಜುಕೋರರು, ಗೂಂಡಾಗಳು, ಅನೈತಿಕ ಸಂಚಾರ ಅಪರಾಧಿಗಳ ಅಪಾಯಕಾರಿ ಚಟುವಟಿಕೆಗಳನ್ನು ಕರ್ನಾಟಕ ತಡೆಗಟ್ಟುವಿಕೆ ಸೆಕ್ಷನ್ 3ರ ಅಡಿಯಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ, ಸ್ಲಂ ಗ್ರಾಬರ್ಸ್ ಮತ್ತು ವೀಡಿಯೊ ಅಥವಾ ಆಡಿಯೊ ಪೈರೇಟ್ಸ್ ಆಕ್ಟರ್, 1985 (ಗೂಂಡಾ ಕಾಯ್ದೆ)ಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದ್ದು, ಬಂಧಿತ ಭರತ್ ಶೆಟ್ಟಿ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬರುತ್ತಿದ್ದಂತೆ ವಶಕ್ಕೆ ಪಡೆದ ಪೊಲೀಸರು ಗೂಂಡಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.