ಮಂಗಳೂರು: ಧರ್ಮಸ್ಥಳದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಾಕ್ಷ ದೂರುದಾರನು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯ ವ್ಯಕ್ತಿಗಳಿಂದ ಗುಪ್ತ ಮಾಹಿತಿ ದೊರಕಿರುತ್ತದೆ ಎಂದು ದಕ್ಷಣ ಕನ್ನಡ ಜಿಲ್ಲಾ ಪೊಲೀಸ್ ಎಸ್ಪಿ ಡಾ.ಅರುಣ್ ಕೆ ತಿಳಿಸಿದ್ದಾರೆ.
ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು, ತನಿಖಾ ಪ್ರಕ್ರಿಯೆಯನ್ನು ಅನುಸರಿಸದೆ ಸಮಾಧಿ ಅಗೆಯುವ ಪ್ರಕ್ರಿಯೆಯನ್ನು ನಡೆಸಲು ಆತುರ ತೋರುತ್ತಿರುವಂತೆ ಸುದ್ದಿ ಹರಿದಾಡುತ್ತಿದೆ. ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಾಕ್ಷಿ ದೂರುದಾರನು ತಲೆಮರೆಸಿಕೊಳ್ಳುವ ಸಾಧ್ಯತೆಯಿದೆ. ಈ ವಿಷಯವನ್ನು ಸಾಕ್ಷಿದಾರರ ಪರವಾದ ವಕೀಲರಿಗೂ ತಿಳಿಸಲಾಗಿದೆ. ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು ಈ ಬಗ್ಗೆ ತನಿಖಾಧಿಕಾರಿ ಗಳಿಗೆ ಇತ್ತೀಚೆಗೆ ಮಾಹಿತಿ ಬಂದಿದೆ. ಈ ವಿಚಾರವನ್ನು ತನಿಖಾಧಿಕಾರಿಯವರ ಗಮನಕ್ಕೆ ಸಾಕ್ಷಿ ದೂರುದಾರನ ಪರ ವಕೀಲರು ತಂದಿರುವುದಿಲ್ಲ. ಸಾಕ್ಷಿ ದೂರು ದಾರರು ಸಮ್ಮತಿಸಿದಲ್ಲಿ ಆತನ ಬೈನ್ ಮಾಪಿಂಗ್, ಫಿಂಗರ್ ಪ್ರಿಂಟ್, ನಾರ್ಕೋ ಅನಾಲಿಸಿಸ್ ಪರೀಕ್ಷೆಗಳನ್ನು ನಡೆಸಲು ತನಿಖಾಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.
ತನಿಖಾಧಿಕಾರಿ ತನಿಖೆಯ ಯಾವ ಹಂತದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಸೂಕ್ತವೆಂದು ನಿರ್ಧರಿಸುತ್ತಾರೋ ಆಗ ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಿಕೊಂಡು ಸಮಾಧಿ ಅಗೆಯುವ ಪ್ರಕ್ರಿಯೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.