ಮಂಗಳೂರು: ವಾರದ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಬಜ್ಜೆ ಪೊಲೀಸರು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಿದ್ದಾರೆ.ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಬಂಧಿತ ಆರೋಪಿ ಎಂದು ಮಂಗಳೂರು ನಗರ ಪೊಲೀಸ್ ಆಯಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಆ.29ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿಯೋರ್ವ ಕರೆ ಮಾಡಿ, 'ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು. ಇಲ್ಲವಾದರೆ ಧ್ವಂಸ ಮಾಡುತ್ತೇನೆ' ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಟರ್ಮಿನಲ್ ವ್ಯವಸ್ಥಾಪಕರು ಬಜ್ಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(2), 351(3) 2 19820 8 ವಿಮಾನಯಾನದ ಸುರಕ್ಷತೆ ವಿರುದ್ಧವಾದ ಅಕ್ರಮ ಚಟುವಟಿಕೆ ತಡೆ ಕಾಯ್ದೆಯ ಸೆಕ್ಷನ್ 3(1)ರ ಅಡಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಆರೋಪಿ ಸಸಿಕುಮಾರ್ ನನ್ನು ವೆಲ್ಲೂರಿನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, 'ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಸಂಪರ್ಕ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹುಡುಕಿ, ಕರೆ ಮಾಡಿ ಬೆದರಿಕೆ ಹಾಕಿದ್ದೆ. ಅದೇ ತರಹ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬೆದರಿಕೆ ಹಾಕಿದ್ದೆ' ಎಂದು ಒಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಆಯಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.