image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸರ್ಕಾರಿ ಯೋಜನೆ ದುರುಪಯೋಗ: ಪುತ್ತೂರಿನ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟ

ಸರ್ಕಾರಿ ಯೋಜನೆ ದುರುಪಯೋಗ: ಪುತ್ತೂರಿನ ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟ

ಪುತ್ತೂರು: ಸರ್ಕಾರದ ಯೋಜನೆಯಡಿ ಮನೆ ಮಂಜೂರಾತಿಗಾಗಿ ನೀಡಲಾಗುವ ಹಣವನ್ನು ನಕಲಿ ದಾಖಲೆ ಸೃಷ್ಟಿಸಿ ದುರುಪಯೋಗಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರಿನ ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

​ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ನಿವಾಸಿಗಳಾದ ಬಾಬು ಮೇರಾ, ಜ್ಯೋತಿ ಹಾಗೂ ತನಿಯ ಮೇರಾ ಎಂಬುವವರು ಸರ್ಕಾರದ ಯೋಜನೆಯಡಿ ಮನೆ ಮಂಜೂರಾತಿಗಾಗಿ ನೀಡಲಾಗುವ ₹1,50,000 ಹಣವನ್ನು ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿದ್ದರು. ಈ ಮೂಲಕ ಸರ್ಕಾರದ ಸೌಲಭ್ಯವನ್ನು ವಂಚನೆಯಿಂದ ಪಡೆದುಕೊಂಡ ಆರೋಪ ಇವರ ಮೇಲಿತ್ತು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಪ್ರಕರಣ (ಅ.ಕ್ರ. ಸಂಖ್ಯೆ: 57/2019) ದಾಖಲಾಗಿದ್ದು, ಐಪಿಸಿ ಕಲಂ 417, 419, 420, 465, 467, 468 ರ ಜೊತೆಗೆ 34ರ ಅಡಿಯಲ್ಲಿ ತನಿಖೆ ಕೈಗೊಳ್ಳಲಾಗಿತ್ತು.

​ಪುತ್ತೂರು ಗ್ರಾಮಾಂತರ ಠಾಣೆಯ ಅಂದಿನ ಪೊಲೀಸ್ ಉಪ ನಿರೀಕ್ಷಕರುಗಳಾದ ಉದಯರವಿ ಮತ್ತು ಸಕ್ತಿವೇಲು ಅವರು ಈ ಪ್ರಕರಣದ ಸಮಗ್ರ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಕುಮಾರಿ ಚೇತನಾ ದೇವಿ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಲಯವು ಆರೋಪಿಗಳ ಮೇಲಿನ ದೋಷಾರೋಪಣೆ ಸಾಬೀತಾದ ಹಿನ್ನೆಲೆಯಲ್ಲಿ, ಮೂವರು ಆರೋಪಿಗಳಿಗೆ 3 ವರ್ಷಗಳ ಸಜೆ (ಜೈಲು ಶಿಕ್ಷೆ) ಹಾಗೂ ತಲಾ ₹5,000 ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

Category
ಕರಾವಳಿ ತರಂಗಿಣಿ