ಬಂಟ್ವಾಳ : ನರಿಕೊಂಬು ಗ್ರಾಮದ ನೆಹರೂ ನಗರದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 30ರಂದು ಸಂಜೆ ಈ ಘಟನೆ ನಡೆದಿದ್ದು, ಬಂಟ್ವಾಳ ನಗರ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರನ್ನು ಕಂಡು, ಅಲ್ಲಿನ ಮೈದಾನದಲ್ಲಿ ನಿಲ್ಲಿಸಲಾಗಿದ್ದ KA19-AE6387 ನೋಂದಣಿಯ ಕಾರಿನಲ್ಲಿದ್ದ ವ್ಯಕ್ತಿಗಳು ಪರಾರಿಯಾಗಲು ಯತ್ನಿಸಿದರು. ಪೊಲೀಸರು ಆ ಪೈಕಿ ಸಜಿಪ ಮೂಡ ನಿವಾಸಿ ಶಾಕೀರ್ (28) ಎಂಬಾತನನ್ನು ಹಿಡಿದು ವಿಚಾರಣೆ ನಡೆಸಿದಾಗ, ತಾನು ಹಾಗೂ ತನ್ನ ಸ್ನೇಹಿತರಾದ ಅಸೀಪ್, ಸಿದ್ದಿಕ್ ಮತ್ತು ಇರ್ಷಾದ್ ಸೇರಿ ಮಾದಕ ವಸ್ತುಗಳನ್ನು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಶಾಕೀರ್ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.