ಮಂಗಳೂರು: ನಗರದ ಕದ್ರಿ ಉದ್ಯಾನವನದ ಬಳಿ ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪುಗಳನ್ನು (Pangolin Scales) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿ.ಐ.ಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 05-05-2026 ರಂದು ಮಧ್ಯಾಹ್ನ ಸುಮಾರು 3:00 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರಿನಲ್ಲಿ (KA 05 MS 1049) ಹೊಂಚು ಹಾಕುತ್ತಿದ್ದವರನ್ನು ವಶಕ್ಕೆ ಪಡೆದರು. ಬಂಧಿತರಿಂದ ಒಟ್ಟು 5.200 ಕೆ.ಜಿ ತೂಕದ ಚಿಪ್ಪು ಹಂದಿಯ ಚಿಪ್ಪುಗಳನ್ನು ಮತ್ತು ಸುಮಾರು 3 ಲಕ್ಷ ಮೌಲ್ಯದ ಕಾರನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳನ್ನು ಬೆಂಗಳೂರು ದಕ್ಷಿಣದ ಹೆಚ್.ಆರ್. ಜಗದೀಶ್ (50 ವರ್ಷ), ಕನಕಪುರದ ಸಿದ್ದು ನಾಯ್ಕ (38 ವರ್ಷ) ಹಾಗೂ ಬೆಂಗಳೂರಿನ ಬನಶಂಕರಿಯ ಬಾಬು (48 ವರ್ಷ) ಎಂದು ಗುರುತಿಸಲಾಗಿದೆ.
ಬೆಂಗಳೂರು ಸಿ.ಐ.ಡಿ ಅರಣ್ಯ ಘಟಕದ ಪೊಲೀಸ್ ಮಹಾನಿರೀಕ್ಷಕರು ಹಾಗೂ ಮಡಿಕೇರಿ ಸಿ.ಐ.ಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ಎನ್ ಜಿ ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಸಿ.ಐ.ಡಿ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ದಿಲೀಪ್ ಜೆ ಆರ್ ಹಾಗೂ ಸಿಬ್ಬಂದಿಗಳಾದ ತಾರಾನಾಥ ಎಸ್ ಮತ್ತು ಅಬ್ದುಲ್ ರಫಾರ್ ಅವರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದಂತೆ ಇಂತಹ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.