ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಸಿಮೆಂಟ್ ಶೀಟ್ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕೇರಳದ ಕಾಂಞಿಗಾಡ್ನಲ್ಲಿ ಬಂಧಿಸಿದ್ದಾರೆ.
ಮೇ 24ರಂದು ಬೆಳಗಿನ ಜಾವ 2:10ರ ಸುಮಾರಿಗೆ ಕೋಡಿಕಲ್ ನಾರಾಯಣಗುರು ಸಮುದಾಯ ಭವನದ ಎದುರು ಪೊಲೀಸರು ಗಸ್ತು ತಿರುಗುತ್ತಿದ್ದಾಗ, ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್ನಲ್ಲಿ ಬಂದ ಇಬ್ಬರು ಯುವಕರು ತಡೆದಿದ್ದಕ್ಕೆ ಸಿಟ್ಟುಗೊಂಡು ಏಕಾಏಕಿ ಹಲ್ಲೆ ನಡೆಸಿದ್ದರು. ಈ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರ ತಲೆಗೆ ಗಾಯವಾಗಿದ್ದು, ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿಯ ಹತ್ಯಡ್ಕದ ಸಚಿನ್ ಕೆ.ಆರ್ (24) ಮತ್ತು ಪುತ್ತೂರಿನ ನೆಲ್ಯಾಡಿಯ ಚಂದನ್ (24) ಎಂದು ಗುರುತಿಸಲಾಗಿದೆ. ಇವರು ಅಶೋಕನಗರದ ಫಲ್ಗುಣಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದರು. ಕೃತ್ಯದ ಬಳಿಕ ಪರಾರಿಯಾಗಿದ್ದ ಆರೋಪಿಗಳನ್ನು ಸಿಸಿಬಿ ತಂಡವು ತನಿಖೆಯ ಮೂಲಕ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಸ್ಕೂಟರ್ನ್ನು ವಶಪಡಿಸಿಕೊಂಡಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಉರ್ವ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.