ಮಂಗಳೂರು: ಅಕ್ರಮವಾಗಿ ಜಾನುವಾರನ್ನು ವಧೆ ಮಾಡುತ್ತಿದ್ದ ಸ್ಥಳದ ಮೇಲೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿ ನಡೆದಿದೆ.
ಮೇ 29, 2026ರ ಸಂಜೆ ವೇಳೆ ಸವಣೂರಿನ ತೋಟವೊಂದರಲ್ಲಿ ಅಕ್ರಮ ಗೋವಧೆ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಸಂತೋಷ್ ಬಿ.ಪಿ. ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅವರು, ತಮ್ಮ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ, ಅಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ.
ಈ ಕೃತ್ಯದಲ್ಲಿ ತೊಡಗಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಅವರು ಕೆ. ಅಬ್ದುಲ್ ರಫೀಕ್ (37), ಅದ್ರಾಮ ಮಾಂತೂರು (41) ಮತ್ತು ಅಬ್ದುಲ್ ಖಾದರ್ ಪಣೆಮಜಲು (57) ಎಂದು ಗುರುತಿಸಲಾಗಿದೆ. ಆರೋಪಿಗಳು ಯಾವುದೇ ಪರವಾನಿಗೆ ಪಡೆಯದೆ ಕಾನೂನುಬಾಹಿರವಾಗಿ ಗೋವಧೆ ನಡೆಸುತ್ತಿರುವುದು ವಿಚಾರಣೆಯಿಂದ ದೃಢಪಟ್ಟಿದೆ.
ಪೊಲೀಸರು ಸ್ಥಳದಲ್ಲಿದ್ದ ಜಾನುವಾರಿನ ಮಾಂಸ ಹಾಗೂ ಕೃತ್ಯಕ್ಕೆ ಬಳಸಿದ್ದ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4, 7, 12ರ ಅನ್ವಯ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023’ರಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.