ನವದೆಹಲಿ : ಕೇಂದ್ರ ಸರ್ಕಾರವು ತನಗೆ ನೀಡಿದ್ದ ವಾಗ್ದಾನಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (CJP), ಸೆಪ್ಟೆಂಬರ್ 5, 2026 ರಂದು ನವದೆಹಲಿಯಲ್ಲಿ ಬೃಹತ್ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಜುಲೈ 25 ರಂದು ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸದ ಕಾರಣ ದೇಶದ ಯುವಜನತೆಯನ್ನು ಸಂಘಟಿಸಿ ಮತ್ತೆ ಬೀದಿಗೆ ಇಳಿಯಲು ನಿರ್ಧರಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ.
ಸೋಮವಾರ ಮಧ್ಯಾಹ್ನ ನಡೆದ CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದೇಶದ ಯುವಜನತೆಗೆ ನೀಡಿದ್ದ ಭರವಸೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಸಭೆಯ ನಂತರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಸಂಘಟನೆಯು, ಸೆಪ್ಟೆಂಬರ್ 5 ರಂದು ನವದೆಹಲಿಯ ಇಂಡಿಯಾ ಗೇಟ್ನಿಂದ ಹೊಸ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದೆ. ಜುಲೈ 20 ರಂದು ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಅನಾಹುತದಲ್ಲಿ ಜೀವ ಕಳೆದುಕೊಂಡ ನೀಟ್ (NEET) ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯಕ್ಕೊಳಗಾದ ಸಂತ್ರಸ್ತರು ಹಾಗೂ ದೇಶಾದ್ಯಂತದ ವಿದ್ಯಾರ್ಥಿಗಳು ಮತ್ತು ಯುವಕರು ಈ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ.
ಕೇಂದ್ರ ಸರ್ಕಾರವು ದೇಶದ ಜೆನ್-ಝಿ (Gen-Z) ಯುವ ಪೀಳಿಗೆಗೆ ಮತ್ತು ತಮ್ಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ನಂಬಿಕೆದ್ರೋಹ ಎಸಗಲು ಹೊರಟಿದೆ. ಹೀಗಾಗಿ ಮತ್ತೆ ಹೋರಾಟದ ಹಾದಿ ಹಿಡಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಸಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ ಒಂದು ತಿಂಗಳಿನಿಂದ ಸರ್ಕಾರವು ತಾಂತ್ರಿಕ ಕಾರಣಗಳನ್ನು ಒಡ್ಡಿ ನೀಡಿದ್ದ ವಾಗ್ದಾನಗಳಿಂದ ನುಣುಚಿಕೊಳ್ಳುತ್ತಿದೆ ಹಾಗೂ ಸಮಯ ವ್ಯರ್ಥ ಮಾಡುವ ತಂತ್ರ ಅನುಸರಿಸುತ್ತಿದೆ ಎಂದು ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಆರೋಪಿಸಿದೆ.
ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ವೇಳೆ ಕೂಡ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ವ್ಯಕ್ತಪಡಿಸುತ್ತಿಲ್ಲ. ಆಲ್ ಇಂಡಿಯಾ ಮಟ್ಟದಲ್ಲಿ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್ಐಆರ್ಗಳ (FIR) ಪಟ್ಟಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆಗಸ್ಟ್ 18 ರಂದು ನಿರ್ದೇಶನ ನೀಡಿದ್ದರೂ, ಸರ್ಕಾರ ಆ ಪಟ್ಟಿಯನ್ನು ನೀಡಲು ನಿರಾಕರಿಸುತ್ತಿದೆ. ಇದರಿಂದಾಗಿ ಎಲ್ಲಾ ಪ್ರಕರಣಗಳನ್ನು ಒಂದೇ ಬಾರಿಗೆ ವಜಾಗೊಳಿಸಲು ನ್ಯಾಯಾಲಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಸಂಘಟನೆ ದೂರಿದೆ.
ತಮ್ಮ ತಾಳ್ಮೆಯನ್ನು ಸರ್ಕಾರ ದೌರ್ಬಲ್ಯವೆಂದು ಭಾವಿಸಬಾರದು ಮತ್ತು ತಮ್ಮ ಸದ್ಭಾವನೆಯನ್ನು ನಂಬಿಕೆದ್ರೋಹ ಎಸಗಲು ಅವಕಾಶವಾಗಿ ಬಳಸಿಕೊಳ್ಳಬಾರದು ಎಂದು ಎಚ್ಚರಿಸಿರುವ ಸಿಜೆಪಿ, ಲಿಖಿತ ಭರವಸೆಯನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಆಗ್ರಹಿಸಿದೆ. ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ನಡೆಯಲಿರುವ ಈ ಬೃಹತ್ ಪ್ರತಿಭಟನಾ ಮೆರವಣಿಗೆಯು ದೇಶಾದ್ಯಂತ ಮತ್ತೆ ಯುವ ಸೌಧವನ್ನು ಕದಡುವ ಲಕ್ಷಣಗಳು ಕಾಣಿಸುತ್ತಿವೆ.