ನವದೆಹಲಿ: ಲಡಾಖ್ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ವಿರುದ್ಧ ಬೊಟ್ಟು ಮಾಡಿರುವ ಕೇಂದ್ರ ಸರ್ಕಾರ, ಅವರು (ಸೋನಮ್ ವಾಂಗ್ಚುಕ್) ನೇಪಾಳದಲ್ಲಿ ಇತ್ತೀಚೆಗೆ ನಡೆದ ಜೆನ್-ಝೀ ಪ್ರತಿಭಟನೆಯ ಕುರಿತು ಪ್ರಚೋದನಾಕಾರಿ ಉಲ್ಲೇಖಗಳನ್ನು ಮಾಡುವ ಮೂಲಕ ಜನರನ್ನು ದಿಕ್ಕು ತಪ್ಪಿಸಿದರು ಎಂದು ಹೇಳಿದೆ. ಕೇಂದ್ರ ಗೃಹ ಸಚಿವಾಲಯ ತಡರಾತ್ರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಲಡಾಖ್ಗೆ ರಾಜ್ಯ ಸ್ಥಾನಮಾನ ಹಾಗೂ ಸಾಂವಿಧಾನಿಕ ರಕ್ಷಣೆಗಾಗಿ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ವಾಂಗ್ಚುಕ್ ನೀಡಿದ ಹೇಳಿಕೆಗಳು ಜನಸಮೂಹವನ್ನು ಹಿಂಸಾಚಾರಕ್ಕೆ ಪ್ರಚೋದಿಸಿದವು ಎಂದು ಉಲ್ಲೇಖಿಸಲಾಗಿದೆ. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ನಾಲ್ವರು ಮೃತಪಟ್ಟು, 80ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಈ ಸರ್ಕಾರ ಹೇಳಿಕೆ ನೀಡಿದೆ. 'ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಾಂಗ್ಚುಕ್ ಅವರು ಇಟ್ಟಿರುವ ಬೇಡಿಕೆಗಳು ಉನ್ನತ ಅಧಿಕಾರ ಸಮಿತಿ (ಎಚ್ಪಿಸಿ) ಸಭೆಯ ಚರ್ಚೆಯ ಪ್ರಮುಖ ಅಂಶಗಳಾಗಿವೆ. ಸತ್ಯಾಗ್ರಹವನ್ನು ಕೈಬಿಡುವಂತೆ ಹಲವು ನಾಯಕರು ಒತ್ತಾಯಿಸಿದ್ದರೂ, ಅವರು ಹೋರಾಟವನ್ನು ಮುಂದವರಿಸಿದ್ದರು. ಅಷ್ಟಲ್ಲದೆ ಅರಬ್ ಸ್ಪ್ರಿಂಗ್ ಶೈಲಿಯ ಹಾಗೂ ನೇಪಾಳದಲ್ಲಿ ನಡೆದ ಜೆನ್-ಝೀ ಮಾದರಿಯ ಪ್ರತಿಭಟನೆಗಳನ್ನು ಉಲ್ಲೇಖಿಸುವ ಮೂಲಕ ಜನರನ್ನು ದಾರಿ ತಪ್ಪಿಸಿದರು' ಎಂದು ಪ್ರತಿಪಾದಿಸಿದೆ.
ಸಾಂವಿಧಾನಿಕವಾಗಿ ರಕ್ಷಣೆ ಒದಗಿಸುವ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದಿರುವ ಸಚಿವಾಲಯ, ಹಳೆಯ ಮತ್ತು ಪ್ರಚೋದನಕಾರಿ ವಿಡಿಯೊಗಳನ್ನು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಮನವಿ ಮಾಡಿದೆ. ಎಚ್ಪಿಸಿಯ ಮುಂದಿನ ಸಭೆಯನ್ನು ಅಕ್ಟೋಬರ್ 6ರಂದು ನಡೆಸಲು ನಿರ್ಧರಿಸಲಾಗಿದೆ. ಹಾಗೆಯೇ, ಸೆಪ್ಟೆಂಬರ್ 25 ಮತ್ತು 26ರಂದು ಲಡಾಖ್ ನಾಯಕರೊಂದಿಗೆ ಮಾತುಕತೆ ನಡೆಸಲು ಯೋಜಿಸಲಾಗಿದೆ ಎಂದೂ ಮಾಹಿತಿ ನೀಡಿದೆ. ವಾಂಗ್ಚುಕ್ ಅವರ ಪ್ರಚೋದನಾಕಾರಿ ಭಾಷಣಗಳ ಬಳಿಕ ಪ್ರತಿಭಟನಾ ಸ್ಥಳದಿಂದ ತೆರಳಿದ ಒಂದು ಗುಂಪು ರಾಜಕೀಯ ಪಕ್ಷವೊಂದರ ಕಚೇರಿ ಹಾಗೂ ಲೇಹ್ ಸಿಇಸಿ ಕಚೇರಿ ಮೇಲೆ ದಾಳಿ ಮಾಡಿದೆ ಎಂದು ತಿಳಿಸಿದೆ. 'ಅವರು (ಗುಂಪು) ಕಚೇರಿಗಳಿಗೆ ಬೆಂಕಿ ಹಚ್ಚಿದರು. ಭದ್ರತಾ ಸಿಬ್ಬಂದಿ ಮೇಲೆ ದಾಳಿ ಮಾಡಿದರು. ಪೊಲೀಸ್ ವಾಹನಗಳಿಗೂ ಬೆಂಕಿ ಹಚ್ಚಿದರು. ದಾಳಿ ವೇಳೆ ಕನಿಷ್ಠ 30 ಪೊಲೀಸರು/ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡರು. ಆದಾಗ್ಯೂ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದನ್ನು, ಪೊಲೀಸರ ಮೇಲಿನ ದಾಳಿಯನ್ನು ಆ ಗುಂಪು ಮುಂದುವರಿಸಿತು. ಹೀಗಾಗಿ, ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಬೇಕಾಯಿತು. ಈ ವೇಳೆ, ದುರದೃಷ್ಟವಶಾತ್ ಕೆಲವು ಸಾವು-ನೋವು ವರದಿಯಾಗಿವೆ' ಎಂದು ವಿವರಿಸಿದೆ.