image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಸಿದ್ದರಾಮಯ್ಯ ಸಿಎಂ ಬದಲಾವಣೆ ಕೇವಲ ಊಹಾಪೋಹ: ಹೈಕಮಾಂಡ್ ಸಭೆಯ ಬಳಿಕ ಕಾಂಗ್ರೆಸ್ ಅಧಿಕೃತ ಸ್ಪಷ್ಟನೆ

ಸಿದ್ದರಾಮಯ್ಯ ಸಿಎಂ ಬದಲಾವಣೆ ಕೇವಲ ಊಹಾಪೋಹ: ಹೈಕಮಾಂಡ್ ಸಭೆಯ ಬಳಿಕ ಕಾಂಗ್ರೆಸ್ ಅಧಿಕೃತ ಸ್ಪಷ್ಟನೆ

ಬೆಂಗಳೂರು : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹುದ್ದೆಯಿಂದ ಬದಲಾಯಿಸಲಾಗುತ್ತದೆ ಎಂಬ ಸುದ್ದಿಯಲ್ಲಿ ಯಾವುದೇ ವಾಸ್ತವತೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಸ್ಪಷ್ಟಪಡಿಸಿದೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ರೀತಿಯ ಊಹಾಪೋಹಗಳಿಗೆ ಪಕ್ಷದ ವರಿಷ್ಠರು ತೆರೆ ಎಳೆದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪ ಕೇವಲ ವದಂತಿಯಷ್ಟೇ ಎಂದು ಹಿರಿಯ ನಾಯಕರು ಖಡಾಖಡಿಯಾಗಿ ಹೇಳಿದ್ದಾರೆ.

ದೆಹಲಿಯ ಇಂದಿರಾ ಭವನದಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆಸಿದ ಮಹತ್ವದ ಸಂವಾದದ ಬಳಿಕ ಈ ಅಧಿಕೃತ ಸ್ಪಷ್ಟನೆ ಹೊರಬಿದ್ದಿದೆ. ಹೈಕಮಾಂಡ್ ತುರ್ತು ಕರೆಯ ಮೇರೆಗೆ ಸೋಮವಾರ ಸಂಜೆಯೇ ಸಿಎಂ ಮತ್ತು ಡಿಸಿಎಂ ಇಬ್ಬರೂ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಈ ಸಭೆಯು ಕೇವಲ ಮುಂಬರುವ ಚುನಾವಣೆಗಳ ಕುರಿತು ಚರ್ಚಿಸಲು ಆಯೋಜಿತವಾಗಿತ್ತು ಎಂದು ಪಕ್ಷದ ಮೂಲಗಳು ತಿಳಿಸಿವೆ. ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದ್ದು, ಹಾಲಿ ಸದಸ್ಯರ ಅಧಿಕಾರಾವಧಿ ಮುಂದಿನ ಎರಡು ತಿಂಗಳಲ್ಲಿ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗವು ಚುನಾವಣೆಯನ್ನು ಪ್ರಕಟಿಸಿದೆ. ನಿವೃತ್ತಿ ಹೊಂದಲಿರುವ ಸದಸ್ಯರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಪ್ರಮುಖರಾಗಿದ್ದಾರೆ. ಇದರೊಂದಿಗೆ ಜೂನ್ 11 ರಂದು ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೂ ಚುನಾವಣೆ ನಿಗದಿಯಾಗಿದ್ದು, ಜೂನ್ 30 ಕ್ಕೆ ಅವಧಿ ಮುಗಿಯಲಿರುವ ಗೋವಿಂದ ರಾಜು, ನಾಸೀರ್ ಅಹ್ಮದ್ ಮತ್ತು ಬಿ.ಕೆ. ಹರಿಪ್ರಸಾದ್ ಅವರ ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ.

ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಇಂದು ನಡೆದ ಸಭೆಯಲ್ಲಿ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಆಯ್ಕೆ ಮತ್ತು ಕಾರ್ಯತಂತ್ರದ ಬಗ್ಗೆ ಮಾತ್ರವೇ ವಿವರವಾದ ಚರ್ಚೆ ನಡೆಸಲಾಗಿದೆ. ಇದನ್ನು ಹೊರತುಪಡಿಸಿ ನಾಯಕತ್ವ ಬದಲಾವಣೆಯ ಯಾವುದೇ ವಿಷಯಗಳು ಪ್ರಸ್ತಾಪವಾಗಿಲ್ಲ. ಸಿಎಂ ಬದಲಾವಣೆ ಸುದ್ದಿ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುನ್ನಡೆಯಲಿದೆ ಎಂದು ತಿಳಿಸುವ ಮೂಲಕ ಗೊಂದಲಗಳಿಗೆ ಪೂರ್ಣವಿರಾಮ ಇಟ್ಟಿದ್ದಾರೆ.

Category
ಕರಾವಳಿ ತರಂಗಿಣಿ