image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಗಡಿ ನಿರ್ಣಯ, ಮಹಿಳಾ ಮೀಸಲಾತಿಗೆ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರ ಪ್ಲಾನ್

ಗಡಿ ನಿರ್ಣಯ, ಮಹಿಳಾ ಮೀಸಲಾತಿಗೆ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಕೇಂದ್ರ ಪ್ಲಾನ್

ನವದೆಹಲಿ : ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಮುಂಗಾರು ಅಧಿವೇಶನದ ಬಳಿಕ ಮಹತ್ವಾಕಾಂಕ್ಷೆಯ ಗಡಿ ನಿರ್ಣಯ (ಡಿಲಿಮಿಟೇಶನ್) ಮಸೂದೆ ಹಾಗೂ ಮಹಿಳಾ ಮೀಸಲಾತಿ ಮಸೂದೆಯ ಕುರಿತು ಚರ್ಚಿಸಲು ಆಗಸ್ಟ್ 16 ರಿಂದ 18 ರವರೆಗೆ ಎರಡು ದಿನಗಳ ವಿಶೇಷ ಸಂಸತ್ ಅಧಿವೇಶನ ಕರೆಯಲು ಚಿಂತನೆ ನಡೆಸಿದೆ. ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತ ಪಡೆಯಲು ಕೇಂದ್ರ ಸರ್ಕಾರ ಕಸರತ್ತು ನಡೆಸುತ್ತಿದ್ದು, ಈ ಸಂಬಂಧ ವಿರೋಧ ಪಕ್ಷಗಳೊಂದಿಗೆ ಮಾತುಕತೆ ತೀವ್ರಗೊಳಿಸಿದೆ.

ಸಂಸತ್ತಿನಲ್ಲಿ ಎದುರಾಗಿರುವ ಬಿಕ್ಕಟ್ಟು ನಿವಾರಿಸಲು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸುಮಾರು 50 ನಿಮಿಷಗಳ ಕಾಲ ಸುದೀರ್ಘ ಸಭೆ ನಡೆಸಿದ್ದಾರೆ. ಈ ವೇಳೆ ಗಡಿ ನಿರ್ಣಯ ಮತ್ತು ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ತಿದ್ದುಪಡಿಗಳ ಕುರಿತು ಕಾಂಗ್ರೆಸ್ ಪಕ್ಷದ ನಿಲುವನ್ನು ರಿಜಿಜು ಆಲಿಸಿದರು. ಇದೇ ವೇಳೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದಿರುವ ಅತಿಯಾದ ಪೊಲೀಸ್ ಬಲಪ್ರಯೋಗದ ವಿಷಯವಾಗಿ ಗೃಹ ಸಚಿವ ಅಮಿತ್ ಶಾ ಅವರು ಸದನ ಉದ್ದೇಶಿಸಿ ಹೇಳಿಕೆ ನೀಡಬೇಕು ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಪ್ರತಿಪಕ್ಷಗಳೊಂದಿಗೆ ಒಮ್ಮತ ರೂಪಿಸಲು ಕೇಂದ್ರ ಸರ್ಕಾರವು ಸಚಿವರಾದ ಪ್ರಹ್ಲಾದ್ ಜೋಶಿ, ಪಿಯೂಷ್ ಗೋಯಲ್, ಅರ್ಜುನ್ ರಾಮ್ ಮೇಘವಾಲ್ ಮತ್ತು ಎಲ್. ಮುರುಗನ್ ಅವರಿಗೆ ಜವಾಬ್ದಾರಿ ವಹಿಸಿದೆ. ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರೊಂದಿಗೆ ಈ ಸಚಿವರು ಸದ್ಯದಲ್ಲೇ ಪ್ರತ್ಯೇಕ ಚರ್ಚೆ ನಡೆಸಿ, ಸಂಸತ್ತಿನ ಕಲಾಪ ಸುಸೂತ್ರವಾಗಿ ನಡೆಯಲು ಹಾದಿ ಸುಗಮಗೊಳಿಸಲಿದ್ದಾರೆ.

Category
ಕರಾವಳಿ ತರಂಗಿಣಿ