ಬೆಂಗಳೂರು : ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಸಮಾಲೋಚನೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಹೊಸ ಉದ್ದಿಮೆ ಅವಕಾಶಗಳ ಜತೆಗೆ, ರಾಜಧಾನಿಯ ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.
ಬೆಂಗಳೂರಿನ ಭೀಕರ ಸಂಚಾರ ದಟ್ಟಣೆ ನಿಯಂತ್ರಿಸಲು ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜನೆಗೆ ಸರ್ಕಾರ ಅಂದಾಜು ₹17,698 ಕೋಟಿ ವೆಚ್ಚ ನಿಗದಿಪಡಿಸಿತ್ತು. ಆದರೆ, ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ ಸಂಸ್ಥೆಯು ₹22,267 ಕೋಟಿ ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಸರ್ಕಾರದ ಅಂದಾಜು ಮೊತ್ತಕ್ಕಿಂತ ಇದು ಹೆಚ್ಚಾಗಿದ್ದರೂ, ಬಿಡ್ಡಿಂಗ್ನಲ್ಲಿ ಭಾಗವಹಿಸಿದ್ದ ಇತರೆ ಸಂಸ್ಥೆಗಳಿಗೆ ಹೋಲಿಸಿದರೆ ಅದಾನಿ ಸಂಸ್ಥೆಯ ಬಿಡ್ ಮೊತ್ತವೇ ಕಡಿಮೆಯಾಗಿದೆ. ಟೆಂಡರ್ ಅಧಿಕೃತವಾಗಿ ಅಂತಿಮಗೊಳ್ಳುವ ಮುನ್ನವೇ ಸಂಸ್ಥೆಯು ಸುರಂಗ ಮಾರ್ಗ ಹಾದುಹೋಗುವ ಸ್ಥಳಗಳಲ್ಲಿ ಅಗತ್ಯವಿರುವ ಪ್ರಾಥಮಿಕ ಭೂ ಸಮೀಕ್ಷೆ ಹಾಗೂ ಮಣ್ಣಿನ ಗುಣಮಟ್ಟ ಪರೀಕ್ಷೆ ಸೇರಿದಂತೆ ಪ್ರಮುಖ ತಾಂತ್ರಿಕ ಪರಿಶೀಲನೆಗಳನ್ನು ಈಗಾಗಲೇ ಪೂರ್ಣಗೊಳಿಸಿದೆ.