image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ನೀಟ್ ಪ್ರತಿಭಟನೆ ತನಿಖಾ ಸಮಿತಿ ರಚನೆಗೆ ಆಕ್ಷೇಪ...

ನೀಟ್ ಪ್ರತಿಭಟನೆ ತನಿಖಾ ಸಮಿತಿ ರಚನೆಗೆ ಆಕ್ಷೇಪ...

ನವದೆಹಲಿ : ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆ ವೇಳೆ ನಡೆದಿದೆಯೆನ್ನಲಾದ ಪೊಲೀಸರ ದೌರ್ಜನ್ಯ ಹಾಗೂ ಪ್ರತಿಭಟನಾಕಾರರ ಹಿಂಸಾಚಾರದ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್ ರಚಿಸಿರುವ ಉನ್ನತ ಮಟ್ಟದ ಸಮಿತಿಯ (HPEC) ಸಂರಚನೆಗೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ಈ ವಿಷಯವನ್ನು ಉಲ್ಲೇಖಿಸಿ, ಅರ್ಜಿಯನ್ನು ಲಿಸ್ಟ್ ಮಾಡುವಂತೆ ಕೋರಿದರು. ಆದರೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದರು. ಅರ್ಜಿದಾರರು ಸಮಿತಿಯನ್ನು ಪುನಾರಚಿಸಲು ನಿರ್ದಿಷ್ಟ ಹೆಸರುಗಳನ್ನು ನೀಡುತ್ತಿರುವುದು ಹಾಗೂ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸುತ್ತಿರುವುದನ್ನು ಆಕ್ಷೇಪಿಸಿದ ಅವರು, ಇದೊಂದು ರಾಜಕೀಯ ಪ್ರೇರಿತ ಮತ್ತು ನಿಗೂಢ ಅರ್ಜಿ ಎಂದು ಕೋರ್ಟ್‌ ಗಮನಕ್ಕೆ ತಂದರು.

ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಮತ್ತು ವಕೀಲ ಪ್ರಶಾಂತ್ ಭೂಷಣ್, ತಾವು ಕೇವಲ ಅರ್ಜಿಯನ್ನು ಲಿಸ್ಟ್ ಮಾಡಲು ಮನವಿ ಮಾಡುತ್ತಿದ್ದು, ಸಮಿತಿಯ ರಚನೆ ಹಾಗೂ ಕಾರ್ಯವೈಖರಿ ಬಗ್ಗೆ ಅರ್ಜಿದಾರರಲ್ಲಿ ಕೆಲ ತಪ್ಪು ತಿಳುವಳಿಕೆಗಳಿವೆ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಸೂರ್ಯಕಾಂತ್, ನ್ಯಾಯಾಲಯವು ಅತ್ಯುತ್ತಮ ವ್ಯಕ್ತಿಗಳನ್ನೇ ಸಮಿತಿಗೆ ಆಯ್ಕೆ ಮಾಡಿದೆ ಎಂದು ಹೇಳಿದರು. ಈ ಸಮಿತಿಯು ನ್ಯಾಯಾಲಯದ ನೇರ ಮೇಲ್ವಿಚಾರಣೆಯಲ್ಲೇ ಕಾರ್ಯನಿರ್ವಹಿಸಲಿದ್ದು, ಮುಖ್ಯ ಪ್ರಕರಣದ ವಿಚಾರಣೆ ವೇಳೆಯಲ್ಲೇ ಈ ಹೊಸ ಅರ್ಜಿಯನ್ನೂ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ಅರ್ಜಿದಾರರಿಗೆ ಭರವಸೆ ನೀಡಿದರು. ಕಳೆದ ಆಗಸ್ಟ್ 20 ರಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ನೇತೃತ್ವದಲ್ಲಿ 5 ಸದಸ್ಯರ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರವಿಶಂಕರ್ ಝಾ, ಮಾಜಿ ನ್ಯಾಯಮೂರ್ತಿ ಶಾಲಿಂದರ್ ಕೌರ್, ಸಿಬಿಐ ಮಾಜಿ ನಿರ್ದೇಶಕ ರಿಷಿ ಕುಮಾರ್ ಶುಕ್ಲಾ ಮತ್ತು ಮಾಜಿ ಡಿಜಿಪಿ ಎಲ್.ಆರ್. ಬಿಷ್ಣೋಯ್ ಇದ್ದಾರೆ. ಪ್ರತಿಭಟನೆ ವೇಳೆ ನಡೆದ ಬಲಪ್ರಯೋಗ, ಮಹಿಳಾ ಪ್ರತಿಭಟನಾಕಾರರಿಗೆ ಕಿರುಕುಳ ಮತ್ತು ಹಿಂಸಾಚಾರಗಳ ಬಗ್ಗೆ ಪರಿಶೀಲಿಸಿ ನಿಯತಕಾಲಿಕವಾಗಿ ವರದಿ ಸಲ್ಲಿಸುವಂತೆ ಸಮಿತಿಗೆ ಕೋರ್ಟ್ ನಿರ್ದೇಶನ ನೀಡಿದೆ.

Category
ಕರಾವಳಿ ತರಂಗಿಣಿ