ನವದೆಹಲಿ: ಐಪಿಎಸಿ ದಾಳಿ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಗೆ ಹೊಸ ಅರ್ಜಿಯನ್ನು ಸಲ್ಲಿಸಿದ್ದು, ಪಶ್ಚಿಮಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಅವರನ್ನು ಅಮಾನತುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡಿದೆ. ಜಾರಿ ನಿರ್ದೇಶನಾಲಯದ ದಾಳಿ ವೇಳೆ ಅಧಿಕಾರಿಗಳಿಗೆ ಸಹಕಾರ ನೀಡದೇ, ಕಾನೂನು ಬಾಹಿರವಾಗಿ ವರ್ತಿಸಿರುವ ಪಶ್ಚಿಮಬಂಗಾಳದ ಹಿರಿಯ ಪೊಲೀಸ್ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದೆ.
ಇ.ಡಿ ದಾಳಿ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮಧ್ಯಪ್ರವೇಶಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಆರೋಪಿಸಿದ್ದು, ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಲು ನಿರ್ದೇಶನ ನೀಡಬೇಕೆಂದು ಕೋರಿದೆ. ಜನವರಿ 8ರಂದು ಜಾರಿ ನಿರ್ದೇಶನಾಲಯ ಕೋಲ್ಕತಾ ರಾಜಕೀಯ ಸಲಹಾ ಕಚೇರಿ ಐಪಿಎಸಿ ಮೇಲೆ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ನಡೆದ ರಾಜಕೀಯ ಹೈಡ್ರಾಮಾದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಸಚಿವರ ಜತೆ ಆಗಮಿಸಿ ಕೇಂದ್ರ ತನಿಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ದಾಖಲೆಗಳನ್ನು ಬಲವಂತವಾಗಿ ಹೊತ್ತೊಯ್ದಿದ್ದರು. ಐಪಿಎಸಿ ಕಚೇರಿ ಮೇಲೆ ಯಾವ ಆಧಾರದ ಮೇಲೆ ದಾಳಿ ನಡೆಸಿದ್ದೀರಿ ಎಂದು ಪ್ರಶ್ನಿಸಿದ್ದ ಮಮತಾ ಬ್ಯಾನರ್ಜಿ, ಇದು ಟಿಎಂಸಿ ಚುನಾವಣ ಸಂಬಂಧ ದಾಖಲೆಗಳನ್ನು ಕಳವು ಮಾಡುವ ಸಂಚು ಎಂದು ಆರೋಪಿಸಿದ್ದರು. ಅಲ್ಲದೇ ಇ.ಡಿ ದಾಳಿ ನಂತರ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತಾದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.