ನವದೆಹಲಿ : ಮುಂಬರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಸಂಸ್ಥೆಗೆ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, ʼಬಿಜೆಪಿಯು ನುಸುಳುಕೋರರನ್ನು ವಿರೋಧಿಸುತ್ತದೆಯೇ ಹೊರತು ಮುಸ್ಲಿಮರನ್ನಲ್ಲ. ಧರ್ಮದ ಭೇದವಿಲ್ಲದೆ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುವುದು ನಮ್ಮ ಪಕ್ಷದ ನೀತಿಯಾಗಿದೆʼ ಎಂದು ತಿಳಿಸಿದ್ದಾರೆ.
ವಿರೋಧ ಪಕ್ಷಗಳು ಹರಡುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡದಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ. ಪಕ್ಷದ ಪ್ರಚಾರದ ಕುರಿತು ಮಾತನಾಡಿದ ಅವರು, ಮೂಲಸೌಕರ್ಯ ಮೇಲಿನ ಹೂಡಿಕೆಗಳು ಮತ್ತು ಉತ್ತಮ ಆಡಳಿತ ನಮ್ಮ ಪ್ರಚಾರದ ಪ್ರಮುಖ ಆಧಾರಸ್ತಂಭಗಳಾಗಿವೆ. ಜನರು ಬದಲಾವಣೆಯನ್ನು ಬಯಸುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ಕಠಿಣವಾಗಿದೆ ಎಂಬುದನ್ನು ಒಪ್ಪಿಕೊಂಡ ಗಡ್ಕರಿ, ಅನಗತ್ಯ ರಾಜಕೀಯ ಸಂಘರ್ಷಗಳಿಗಿಂತ ಆಡಳಿತ ಮತ್ತು ಅಭಿವೃದ್ಧಿಯ ವಿಷಯಗಳ ಮೇಲೆ ಪಕ್ಷವು ಹೆಚ್ಚಿನ ಗಮನ ಹರಿಸಲಿದೆ ಎಂದರು.