ಪಶ್ಚಿಮ ಬಂಗಾಳ : ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಕೇಂದ್ರ ಸರ್ಕಾರ ವಿಫಲವಾಗುವ ಮೂಲಕ ಬಿಜೆಪಿ ಅವನತಿ ಆರಂಭವಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಹೌರಾದ ಉಲುಬೆರಿಯಾದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2029ರಿಂದ ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿ ಜಾರಿಗೆ ತರಲು ಉದ್ದೇಶಿಸಿದ್ದ ಸಂವಿಧಾನ ತಿದ್ದುಪಡಿ ಮಸೂದೆ ವಿಫಲಗೊಂಡಿರುವುದು ಕೇಂದ್ರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬಿಜೆಪಿ ಈಗಾಗಲೇ ಸೋಲನ್ನು ಕಂಡಿದೆ ಮತ್ತು ಕೇವಲ ತನ್ನ ಮಿತ್ರಪಕ್ಷಗಳ ಬೆಂಬಲದೊಂದಿಗೆ ಅಧಿಕಾರದಲ್ಲಿ ಉಳಿದಿದೆ ಎಂದು ಟೀಕಿಸಿದರು.
ಮಹಿಳಾ ಮೀಸಲಾತಿ ನೀಡಲು ಕ್ಷೇತ್ರ ವಿಂಗಡನೆಯನ್ನು ಬೆಸೆಯುವ ಅಗತ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟ ಅವರು, ಇದು ದೇಶವನ್ನು ವಿಭಜಿಸುವ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿ ಎನ್ಆರ್ಸಿ ಜಾರಿಗೆ ತರುವ ಪಿತೂರಿಯಾಗಿದೆ ಎಂದು ಆರೋಪಿಸಿದರು. ತಮ್ಮ ಪಕ್ಷವು ಮಹಿಳಾ ಪ್ರಾತಿನಿಧ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಲೋಕಸಭೆಯಲ್ಲಿ ಶೇ. 36 ಮತ್ತು ರಾಜ್ಯಸಭೆಯಲ್ಲಿ ಶೇ. 46 ರಷ್ಟು ಮಹಿಳಾ ಸಂಸದರನ್ನು ಹೊಂದಿದೆ. ಇಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಿದ ಮತ್ತೊಂದು ಪಕ್ಷವಿಲ್ಲ, ಇದನ್ನು ಕಂಡು ಬಿಜೆಪಿ ಕಲಿಯಲಿ ಎಂದು ಅವರು ಸವಾಲು ಹಾಕಿದರು. ಬಿಜೆಪಿ ಕೇಂದ್ರದಲ್ಲಿ ಹೆಚ್ಚು ಕಾಲ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಎಚ್ಚರಿಸಿದ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸರ್ಕಾರದ ನೀತಿಗಳು ಮತ್ತು ಕ್ಷೇತ್ರ ವಿಂಗಡನೆಯ ಗುರಿಯನ್ನು ತೀವ್ರವಾಗಿ ಟೀಕಿಸಿದರು. ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರವಾಗದಿರುವುದು ಬಿಜೆಪಿಯ ಅವನತಿಯ ಆರಂಭವಾಗಿದೆ ಎಂದು ಅವರು ಪುನರುಚ್ಚರಿಸಿದರು.