ಕೊಯಂಬತ್ತೂರು : ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಜೊಸೆಫ್ ವಿಜಯ್ ನೇತೃತ್ವದ ಸರ್ಕಾರ ಅಧಿಕಾರವಹಿಸಿಕೊಂಡ ಕೆಲವೇ ದಿನಗಳಲ್ಲಿ ನಡೆದ 10 ವರ್ಷದ ಶಾಲಾ ಬಾಲಕಿಯ ಅಪಹರಣ ಹಾಗೂ ಭೀಕರ ಕೊಲೆ ಘಟನೆ ಇಡೀ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಕೊಯಂಬತ್ತೂರಿನ ಸುಲೂರು ಬಳಿ ನಡೆದ ಈ ಅಮಾನವೀಯ ಕೃತ್ಯಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತೀವ್ರ ಆಘಾತ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದೇ ವೇಳೆ, ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷ ಡಿಎಂಕೆ ನೂತನ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕೊಯಂಬತ್ತೂರಿನ ಸುಲೂರು ಮೂಲದ ಐದನೇ ತರಗತಿ ವಿದ್ಯಾರ್ಥಿನಿ ಗುರುವಾರ ಸಂಜೆ ತನ್ನ ಮನೆಯ ಬಳಿ ಆಟವಾಡುತ್ತಾ, ಹತ್ತಿರದ ಅಂಗಡಿಗೆ ಕಿರಾಣಿ ಸಾಮಾನು ತರಲು ತೆರಳಿದ್ದಾಗ ನಾಪತ್ತೆಯಾಗಿದ್ದಳು. ಕುಟುಂಬಸ್ಥರು ಮತ್ತು ಪೊಲೀಸರು ವ್ಯಾಪಕ ಶೋಧ ನಡೆಸಿದ ನಂತರ, ಶುಕ್ರವಾರ ಸಂಜೆ ಸುಲೂರಿನ ಕಣ್ಣಂಪಾಳಯಂ ಕೆರೆಯ ದಂಡೆಯ ಮೇಲೆ ಆಕೆಯ ಮೃತದೇಹ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಅಪಹರಿಸಲಾಗಿತ್ತು ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪಟ್ಟಣಂ ಮೂಲದ ಕಾರ್ತಿಕ್ (33) ಮತ್ತು ಆತನಿಗೆ ಸಹಕರಿಸಿದ ಮೋಹನ್ ರಾಜ್ ಎಂಬ ಇಬ್ಬರು ಆರೋಪಿಗಳನ್ನು ಶನಿವಾರ ಮುಂಜಾನೆ ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಮುಖ್ಯ ಆರೋಪಿ ಕಾರ್ತಿಕ್ ಕಟ್ಟಡದಿಂದ ಜಿಗಿದು ಕೈಕಾಲು ಮುರಿದುಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆ ಕಿರುಚಾಡಿದಾಗ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಬಾಲಕಿಯ ಭೀಕರ ಕೊಲೆಯ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಮತ್ತು ಮೃತಳ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸುಲೂರು ಪೊಲೀಸ್ ಠಾಣೆಯ ಮುಂದಿನ ತಿರುಚಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಶನಿವಾರ ಮುಂಜಾನೆ 5 ಗಂಟೆಯವರೆಗೆ ಸತತ 8 ಗಂಟೆಗಳ ಕಾಲ ಬೃಹತ್ ರಸ್ತೆ ತಡೆ ಪ್ರತಿಭಟನೆ ನಡೆಸಿದರು. "ನಾವು ರಾಜ್ಯದಲ್ಲಿ ಬದಲಾವಣೆ ತರಲು ವೋಟ್ ಹಾಕಿದ್ದೆವು, ಹೊಸ ಸರ್ಕಾರದಿಂದ ನಮಗೆ ಸುರಕ್ಷತೆಯ ಭರವಸೆ ಬೇಕು. ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿ, ನಮಗೆ ನ್ಯಾಯ ಒದಗಿಸುವ ಭರವಸೆ ನೀಡುವವರೆಗೂ ನಾವು ಶವಗಾರದಿಂದ ಮೃತದೇಹವನ್ನು ಪಡೆಯುವುದಿಲ್ಲ," ಎಂದು ಬಾಲಕಿಯ ತಾಯಿ ಮತ್ತು ಕುಟುಂಬಸ್ಥರು ಪಟ್ಟು ಹಿಡಿದರು. ಪ್ರತಿಭಟನೆಯ ತೀವ್ರತೆಗೆ ಹೆದ್ದಾರಿಯ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಪರ್ಯಾಯ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಾಯಿತು. ಸದ್ಯ ಇಎಸ್ಐ ಆಸ್ಪತ್ರೆಯ ಶವಗಾರದ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಘಟನೆ ಸೃಷ್ಟಿಸಿದ ಸಾರ್ವಜನಿಕ ಆಕ್ರೋಶ ಮತ್ತು ಕುಟುಂಬಸ್ಥರ ಬೇಡಿಕೆಯ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್' (ಟ್ವಿಟರ್) ಮೂಲಕ ಅಧಿಕೃತ ಪ್ರತಿಕ್ರಿಯೆ ನೀಡಿದ್ದಾರೆ. "ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಗೆ ನಡೆದಿರುವ ಈ ಭೀಕರ ಘಟನೆ ನನಗೆ ತೀವ್ರ ಆಘಾತ ಮತ್ತು ಅಪಾರ ದುಃಖವನ್ನು ಉಂಟುಮಾಡಿದೆ. ಇಂತಹ ಅಮಾನವೀಯ ಮತ್ತು ಕ್ಷಮಿಸಲಾಗದ ಕ್ರಿಮಿನಲ್ ಕೃತ್ಯಗಳನ್ನು ನಮ್ಮ ಸಮಾಜದಲ್ಲಿ ಎಂದಿಗೂ ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ," ಎಂದು ಖಂಡಿಸಿದ್ದಾರೆ. ಮುಖ್ಯಮಂತ್ರಿಗಳ ಆದೇಶದ ಬೆನ್ನಲ್ಲೇ ತಮಿಳುನಾಡು ಡಿಜಿಪಿ ಸಂದೀಪ್ ರೈ ರಾಥೋಡ್ ಮತ್ತು ಪಶ್ಚಿಮ ವಲಯ ಐಜಿ ರಮ್ಯಾ ಭಾರತಿ ಅವರು ತನಿಖೆಯ ನೇರ ಉಸ್ತುವಾರಿಗಾಗಿ ತಕ್ಷಣವೇ ಕೊಯಮತ್ತೂರಿಗೆ ಧಾವಿಸಿದ್ದು, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.
ಈ ಘಟನೆಯು ತಮಿಳುನಾಡಿನಲ್ಲಿ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿದೆ. ಪ್ರತಿಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ನೂತನ ಟಿವಿಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 12 ದಿನಗಳಲ್ಲಿ 30ಕ್ಕೂ ಹೆಚ್ಚು ಪ್ರಮುಖ ಅಪರಾಧ ಘಟನೆಗಳು ವರದಿಯಾಗಿವೆ. ಲೈಂಗಿಕ ದೌರ್ಜನ್ಯ, ಗಾಂಜಾ ಕಳ್ಳಸಾಗಣೆ, ರೌಡಿಸಂ ಮತ್ತು ಈಗ ಕೊಯಂಬತ್ತೂರಿನಲ್ಲಿ ಶಾಲಾ ಬಾಲಕಿಯ ಹತ್ಯೆ ನಡೆದಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಕಳವಳ ಮೂಡಿಸಿದೆ. ಸರ್ಕಾರ ಕೇವಲ ಪ್ರಚಾರಕ್ಕೆ ಸೀಮಿತವಾಗದೆ, ಜನರಿಗೆ ಸುರಕ್ಷತೆ ನೀಡಬೇಕು," ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಕುಟುಂಬಕ್ಕೆ ಡಿಎಂಕೆ ಪಕ್ಷವು ಬೆಂಬಲವಾಗಿ ನಿಲ್ಲಲಿದೆ ಎಂದು ಅವರು ಘೋಷಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಮೇ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.