ನವದೆಹಲಿ : ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಯ ಭಾಗವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆಯನ್ನು ಪರಿಶೀಲಿಸುತ್ತಿರುವ ಸಂಸತ್ತಿನ ಜಂಟಿ ಸಮಿತಿಗೆ ವರದಿ ಸಲ್ಲಿಸಲು ಚಳಿಗಾಲದ ಅಧಿವೇಶನದ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ವರದಿ ಸಲ್ಲಿಕೆಯ ಗಡುವನ್ನು ಚಳಿಗಾಲದ ಅಧಿವೇಶನದ ಕೊನೆಯ ವಾರದ ಮೊದಲ ದಿನದವರೆಗೆ ವಿಸ್ತರಿಸುವಂತೆ ಕೋರಿ ಸಮಿತಿಯ ಅಧ್ಯಕ್ಷ ಪಿ.ಪಿ. ಚೌಧರಿ ಅವರು ಬುಧವಾರ ನಿರ್ಣಯ ಮಂಡಿಸಿದ್ದರು. ಈ ನಿರ್ಣಯಕ್ಕೆ ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕಾರ ದೊರೆತಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಸಂವಿಧಾನದ 129ನೇ ತಿದ್ದುಪಡಿ ವಿಧೇಯಕವನ್ನು 41 ಸದಸ್ಯರ ಈ ಸಮಿತಿಯು ಕೂಲಂಕಷವಾಗಿ ಪರಿಶೀಲಿಸುತ್ತಿದೆ. ಲೋಕಸಭೆ, ರಾಜ್ಯ ವಿಧಾನಸಭೆಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ 2029ರ ವೇಳೆಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಪ್ರಸ್ತಾವಿತ ಯೋಜನೆಯ ಕುರಿತು ಸಮಿತಿಯು ವಿರೋಧ ಪಕ್ಷಗಳು ಸೇರಿದಂತೆ ಎಲ್ಲಾ ಪಾಲುದಾರರ ಅಭಿಪ್ರಾಯಗಳನ್ನು ಪ್ರಸ್ತುತ ಸಂಗ್ರಹಿಸುತ್ತಿದೆ. ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ಕೊನೆಯ ವಾರದಲ್ಲಿ ಆರಂಭವಾಗಿ ಕ್ರಿಸ್ಮಸ್ ಹಬ್ಬಕ್ಕೂ ಮುನ್ನ ಮುಕ್ತಾಯಗೊಳ್ಳುತ್ತದೆ.