image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣದ ದೋಷಿಗೆ 30 ವರ್ಷ ಜೈಲು ಶಿಕ್ಷೆ

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣದ ದೋಷಿಗೆ 30 ವರ್ಷ ಜೈಲು ಶಿಕ್ಷೆ

ತಮಿಳುನಾಡು : ದೇಶದಲ್ಲಿ ಸಂಚಲನ ಮೂಡಿಸಿದ್ದ ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ದೋಷಿ ಜ್ಞಾನಶೇಖರ್​​ಗೆ​ 30 ವರ್ಷಗಳ ಜೀವಾವಧಿ ಶಿಕ್ಷೆ ಪ್ರಕಟಿಸಿ ತಮಿಳುನಾಡು ಮಹಿಳಾ ನ್ಯಾಯಾಲಯ ಆದೇಶ ಪ್ರಕಟಿಸಿದೆ.

ಕಳೆದ ಡಿಸೆಂಬರ್​ನಲ್ಲಿ ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಜಲಕ್ಷ್ಮೀ ಅವರು ಜ್ಞಾನಶೇಖರನ್ ತಪ್ಪಿತಸ್ಥ ಎಂದು ಮೇ 28ರಂದು ಘೋಷಿಸಿದ್ದು, ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಿದ್ದಾರೆ. ಪ್ರಾಸಿಕ್ಯೂಷನ್ ಸಾಬೀತುಪಡಿಸಿದ 11 ಆರೋಪಗಳಿಗೆ ಅನುಗುಣವಾಗಿ ಶಿಕ್ಷೆ ವಿಧಿಸಲಾಗಿದ್ದು, ಶಿಕ್ಷೆ ಏಕಕಾಲದಲ್ಲಿ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ಜ್ಞಾನಶೇಖರ್​ ಕುಟುಂಬದ ಏಕೈಕ ಜೀವನಾಧಾರವಾಗಿದ್ದು, ಆತನಿಗೆ ಸೌಮ್ಯ ಶಿಕ್ಷೆ ಪ್ರಕಟಿಸುವಂತೆ ಕೋರಲಾಗಿತ್ತು. ಆದರೆ, ಇದಕ್ಕೆ ಆಕ್ಷೇಪಿಸಿದ ಪ್ರಾಸಿಕ್ಯೂಷನ್​ ಗರಿಷ್ಠ ಶಿಕ್ಷೆಗೆ ಕೋರಿತ್ತು.

ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣವು ತಮಿಳುನಾಡಿನಲ್ಲಿ ಭಾರೀ ಸಂಚಲನ ಸೃಷ್ಟಿಸುವ ಜೊತೆಗೆ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು. ಪ್ರಕರಣ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ಕೊಟ್ಟೂರುಪುರಂ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮೊಬೈಲ್​ ಸಿಗ್ನಲ್‌ಗಳ ಆಧಾರದ ಮೇಲೆ ತನಿಖೆ ನಡೆಸಿ, ಆರೋಪಿ ಜ್ಞಾನಶೇಖರನ್ ಅವರನ್ನು ಡಿಸೆಂಬರ್ 26 ರಂದು ಬಂಧಿಸಿದ್ದರು.

ಘಟನೆ ನಡೆದ ದಿನ ಅಣ್ಣಾ ವಿಶ್ವವಿದ್ಯಾಲಯಕ್ಕೆ ಪ್ರವೇಶಿಸಿದ್ದು ಜ್ಞಾನಶೇಖರನ್​ ಎಂಬುದು ತನಿಖೆಯಲ್ಲಿ ತಿಳಿದು ಬಂದಿತ್ತು. ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಕೆಳಗೆ ಬಿದ್ದು ಕೈಕಾಲು ಮುರಿದುಕೊಂಡಿದ್ದ ಎಂದು ಪೊಲೀಸರು ಚಾರ್ಜ್​ ಶೀಟ್​ನಲ್ಲಿ ಉಲ್ಲೇಖಿಸಿದ್ದರು. ತಮಿಳುನಾಡು ಸರ್ಕಾರವು ಜ್ಞಾನಶೇಖರನ್ ವಿಚಾರಣೆ ನಡೆಸಲು ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳ ತಂಡವನ್ನು ರಚಿಸಿತ್ತು. ತನಿಖಾ ತಂಡವು ವಿಚಾರಣೆ ನಡೆಸಿ ಚೆನ್ನೈ ಮಹಿಳಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, 29 ಸಾಕ್ಷಿಗಳ ಹೇಳಿಕೆಗಳನ್ನು ಆಲಿಸಿತು. ಅಲ್ಲದೇ, ತನಿಖಾ ತಂಡವು, ಸಿಸಿಟಿವಿ ಸಾಕ್ಷ್ಯಗಳು ಮತ್ತು ಮೊಬೈಲ್​ ಧ್ವನಿ ರೆಕಾರ್ಡಿಂಗ್‌ ಕ್ಲಿಪ್​ ಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಜ್ಞಾನಶೇಖರ್​ ಆಡಳಿತರೂಢ ಡಿಎಂಕೆ ಜೊತೆಗಿನ ಸಂಬಂಧ ಕುರಿತು ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಆದರೆ ಪಕ್ಷದ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಆತ ದ್ರಾವಿಡ ಪಕ್ಷದ ಸದಸ್ಯನಲ್ಲ ಎಂದು ಸ್ಪಷ್ಟಪಡಿಸಿದ್ದರು.

Category
ಕರಾವಳಿ ತರಂಗಿಣಿ