ದೇವನಹಳ್ಳಿ: ಹಕ್ಕಿ ಜ್ವರವು ನೆರೆ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕಂಡು ಬಂದಿದೆ. ಅಲ್ಲದೇ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರದಲ್ಲೂ ಕೋಳಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.
ಯಾವುದೇ ಪಕ್ಷಿಗಳು ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಅಸಹಜವಾಗಿ ಇಲ್ಲವೇ ಇದ್ದಕ್ಕಿದ್ದಂತೆ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಿ. ಹಕ್ಕಿ ಜ್ವರ ಕಂಡು ಬಂದ ಸ್ಥಳದಿಂದ 10 ಕೀಮಿ ಸುತ್ತಲಿನ ಗ್ರಾಮಗಳಲ್ಲಿ ಶೀತ ಅಥವಾ ಕೆಮ್ಮು, ಜ್ವರ, ತಲೆನೋವು, ಸ್ನಾಯುಗಳ ನೋವು, ಗಂಟಲು ನೋವು ಇತರ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ನೀಡಿ ಚಿಕಿತ್ಸೆ ಪಡೆಯುವಂತೆ ಡಿಸಿ ಸಲಹೆ ನೀಡಿದ್ದಾರೆ.
ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ನೀಡುತ್ತಿದ್ದು, ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಗುರುತಿಸಿ ಮಾಲೀಕರು ಮತ್ತು ಸಿಬ್ಬಂದಿಗೆ ಅಗತ್ಯ ಮಾಹಿತಿಯನ್ನು ನೀಡಲು ಕ್ರಮ ವಹಿಸಲಾಗಿದೆ. ಸಾರ್ವಜನಿಕರು ಭಯ ಭೀತಿಗೊಳ್ಳದೇ ಎಚ್ಚರದಿಂದ ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಕೈಗಳನ್ನು ಸಾಬೂನಿನಿಂದ ಆಗಾಗ ಚೆನ್ನಾಗಿ ತೊಳೆದುಕೊಳ್ಳುವುದು, ಜನನಿಬಿಡ ಸ್ಥಳಗಳಲ್ಲಿ ಹಾಗೂ ಇತರೆಡೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಂಡು ಬರುತ್ತಿರುವ ಹಕ್ಕಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಕೋಳಿ ಸಾಕಾಣಿಕೆ ಮಾಲಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಡಾ. ಕೆ.ಎನ್ ಅನುರಾಧ ಸೂಚಿಸಿದರು.