ನವದೆಹಲಿ: ದೇಶದಲ್ಲಿ ಇಂಧನ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಮತ್ತು ಕಾಳಸಂತೆ ಮಾರಾಟವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇನ್ನು ಮುಂದೆ ಪೆಟ್ರೋಲ್ ಬಂಕ್ಗಳ ಮೂಲಕ ಕೈಗಾರಿಕಾ, ವಾಣಿಜ್ಯ ಮತ್ತು ಸಾಂಸ್ಥಿಕ ಬಳಕೆದಾರರು ಬೃಹತ್ ಪ್ರಮಾಣದಲ್ಲಿ ಇಂಧನ ಖರೀದಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೇ, ಸಾಮಾನ್ಯ ಗ್ರಾಹಕರು ಅಥವಾ ಪ್ರತಿ ವಾಹನಕ್ಕೆ ದಿನವೊಂದಕ್ಕೆ ಗರಿಷ್ಠ 200 ಲೀಟರ್ಗಳಷ್ಟು ಡೀಸೆಲ್ ಮಾತ್ರ ಮಾರಾಟ ಮಾಡಬೇಕೆಂದು ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ಮುಂದಿನ 90 ದಿನಗಳವರೆಗೆ ಅನ್ವಯವಾಗಲಿದೆ.
ಪ್ರಸ್ತುತ ಅಂತರಾಷ್ಟ್ರೀಯ ಮಟ್ಟದಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಯು ಪೆಟ್ರೋಲಿಯಂ ಪೂರೈಕೆ ಸರಪಳಿ ಮತ್ತು ಲಾಜಿಸ್ಟಿಕ್ಸ್ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಈ ಕಾರಣದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಚಿಲ್ಲರೆ ಇಂಧನ ಮಾರಾಟ ಮಳಿಗೆಗಳಲ್ಲಿ ಅಸಹಜ ಬೇಡಿಕೆ ಕಂಡುಬಂದಿದೆ. ಬೆಲೆ ವ್ಯತ್ಯಾಸದ ಲಾಭ ಪಡೆಯಲು ಬೃಹತ್ ಗ್ರಾಹಕರು ನೇರವಾಗಿ ಪೆಟ್ರೋಲ್ ಬಂಕ್ಗಳ ಮೊರೆ ಹೋಗುತ್ತಿದ್ದು, ಇದರಿಂದ ಸಾಮಾನ್ಯ ಇಂಧನ ಪೂರೈಕೆಗೆ ವ್ಯತ್ಯಯ ಉಂಟಾಗುತ್ತಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ಜೂನ್ 11 ರಂದು 'ಮೋಟಾರ್ ಸ್ಪಿರಿಟ್ ಮತ್ತು ಹೈ ಸ್ಪೀಡ್ ಡೀಸೆಲ್ (ಚಿಲ್ಲರೆ ಮಾರಾಟ ಮಳಿಗೆಗಳ ಮೂಲಕ ಪೂರೈಕೆಯ ತಾತ್ಕಾಲಿಕ ನಿಯಂತ್ರಣ) ಆದೇಶ - 2026'ನ್ನು ಹೊರಡಿಸಿದೆ.
ಸರ್ಕಾರದ ಹೊಸ ಆದೇಶದ ಪ್ರಕಾರ, ಕೈಗಾರಿಕಾ, ವಾಣಿಜ್ಯ ಮತ್ತು ಸಾಂಸ್ಥಿಕ ಗ್ರಾಹಕರು ಇನ್ನು ಮುಂದೆ ಪೆಟ್ರೋಲ್ ಬಂಕ್ಗಳಿಂದ ಇಂಧನ ಪಡೆಯುವಂತಿಲ್ಲ. ಅವರು ಕಡ್ಡಾಯವಾಗಿ ತಮ್ಮದೇ ಆದ ಗ್ರಾಹಕ ಪಂಪ್ಗಳ ಮೂಲಕ ಇಂಧನವನ್ನು ಪಡೆಯಬೇಕಾಗುತ್ತದೆ. ಚಿಲ್ಲರೆ ಮಾರಾಟ ಮಳಿಗೆಗಳು ಇನ್ನು ಮುಂದೆ ಕೇವಲ ವಾಹನಗಳ ಇಂಧನ ಟ್ಯಾಂಕ್ಗಳಿಗೆ ಅಥವಾ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ (PESO) ಅನುಮೋದಿತ ಕಂಟೇನರ್ಗಳಿಗೆ ಮಾತ್ರ ಡೀಸೆಲ್ ಮಾರಾಟ ಮಾಡಲು ಅವಕಾಶವಿದೆ. ಈ ನಿಯಮಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಲು ಎಲ್ಲಾ ತೈಲ ಮಾರುಕಟ್ಟೆ ಕಂಪನಿಗಳಿಗೆ ಸಚಿವಾಲಯ ನಿರ್ದೇಶನ ನೀಡಿದೆ. ಕಳೆದ ಮೇ ತಿಂಗಳಲ್ಲಿ ದೇಶದ ಮೂರು ಪ್ರಮುಖ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಐಒಸಿ, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ಸಂಸ್ಥೆಗಳಲ್ಲಿ ಪೆಟ್ರೋಲ್ ಮಾರಾಟ ಶೇ. 4.8 ಮತ್ತು ಡೀಸೆಲ್ ಮಾರಾಟ ಶೇ. 6.4 ರಷ್ಟು ಏರಿಕೆಯಾಗಿದ್ದು, ಸರ್ಕಾರದ ಈ ತುರ್ತು ಕ್ರಮಕ್ಕೆ ಪ್ರಮುಖ ಕಾರಣವಾಗಿದೆ.