ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ತಿರಂಗಾ ಯಾತ್ರಾ ಸಮಿತಿಯ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಿಲ್ಲೆ ಮೈದಾನದ ಆವರಣದಲ್ಲಿರುವ ಪುರಭವನದವರೆಗೆ ಬೃಹತ್ ತಿರಂಗಾ ಯಾತ್ರೆ ನಡೆಯಿತು. ಮಳೆಯನ್ನೂ ಲೆಕ್ಕಿಸದೆ ಸಹಸ್ರಾರು ಮಂದಿ ತ್ರಿವರ್ಣ ಧ್ವಜ ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡರು.
ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ಮೆರವಣಿಗೆಯನ್ನು ಉದ್ಘಾಟಿಸಿದರೆ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಧ್ವಜ ಹಸ್ತಾಂತರಿಸುವ ಮೂಲಕ ತಿರಂಗ ಯಾತ್ರೆಗೆ ಚಾಲನೆ ನೀಡಿದರು.
ಯಾತ್ರೆಯ ಸಮಾರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಧಾನ ಭಾಷಣ ಮಾಡಿ, ಭಾರತೀಯ ಸೈನ್ಯದಲ್ಲಿ ಜಾತಿ, ಧರ್ಮದ ಲೆಕ್ಕಾಚಾರಕ್ಕೆ ಅವಕಾಶವಿಲ್ಲ. ದೇಶದ ರಕ್ಷಣೆಗಾಗಿ ಹೋರಾಡುವ ಸೈನಿಕರಲ್ಲಿ ಇರುವುದು ದೇಶಭಕ್ತಿಯೊಂದೇ. ಸೈನ್ಯದಂತಹ ಶಿಸ್ತಿನ ವ್ಯವಸ್ಥೆಯಲ್ಲೂ ಜಾತಿಯನ್ನು ಹುಡುಕುವ ಮನಸ್ಥಿತಿ ಅಪಾಯಕಾರಿ ಎಂದು ಅವರು ಹೇಳಿದರು.
ವಿವಿಧ ಪಕ್ಷಗಳು, ಸಂಘಟನೆಗಳು ಹಾಗೂ ಸಮುದಾಯಗಳಿಗೆ ತಮ್ಮದೇ ಧ್ವಜಗಳಿರಬಹುದು. ಆದರೆ ದೇಶವನ್ನು ಪ್ರತಿನಿಧಿಸುವುದು ಒಂದೇ ರಾಷ್ಟ್ರಧ್ವಜ. ಅದರ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದರು.
ಭಾರತದ ಸ್ವಾತಂತ್ರ್ಯ ಕೇವಲ ಅಹಿಂಸಾತ್ಮಕ ಹೋರಾಟದ ಫಲ ಎಂಬುದು ಅರ್ಧಸತ್ಯ. ಮಹಾತ್ಮ ಗಾಂಧೀಜಿ ಜನಸಾಮಾನ್ಯರನ್ನು ಸ್ವಾತಂತ್ರ್ಯ ಚಳುವಳಿಗೆ ದೊಡ್ಡ ಪ್ರಮಾಣದಲ್ಲಿ ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದರೆ, ಕ್ರಾಂತಿಕಾರಿಗಳ ಹೋರಾಟ, ತ್ಯಾಗ ಮತ್ತು ಬಲಿದಾನವೂ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.
ಸಿ ಟಿ ರವಿ ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
ವೀರ ಸಾವರ್ಕರ್ ಸೇರಿದಂತೆ ಅನೇಕ ಕ್ರಾಂತಿಕಾರಿಗಳು ಜೈಲುಗಳಲ್ಲಿ ಅನುಭವಿಸಿದ ಯಾತನೆ ಹಾಗೂ ದೇಶಕ್ಕಾಗಿ ಮಾಡಿದ ತ್ಯಾಗವನ್ನು ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಒಂದೇ ದೃಷ್ಟಿಕೋನದಲ್ಲಿ ನೋಡದೆ, ವಿವಿಧ ಹೋರಾಟಗಾರರ ಕೊಡುಗೆಯನ್ನು ಸಮಗ್ರವಾಗಿ ಅರ್ಥಮಾಡಿಕೊಳ್ಳಬೇಕು ಎಂದರು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
ಬ್ರಿಟಿಷರು ದೇಶವನ್ನು ವಿಭಜಿಸಿ ಸ್ವಾತಂತ್ರ್ಯ ನೀಡಿದ ಸಂದರ್ಭದಲ್ಲಿ ಹಲವು ಸಂಸ್ಥಾನಗಳ ಭವಿಷ್ಯವೂ ಪ್ರಶ್ನೆಯಾಗಿತ್ತು. ಅಂತಹ ಸಂದರ್ಭದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೃಢ ನಾಯಕತ್ವ ಮತ್ತು ಪ್ರಯತ್ನಗಳಿಂದ ದೇಶದ ಏಕತೆ ಸಾಧ್ಯವಾಯಿತು. ಅವರ ಕೊಡುಗೆಯನ್ನು ಮರೆಯಬಾರದು ಎಂದು ಸಿ.ಟಿ. ರವಿ ಹೇಳಿದರು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಂದು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಅಗತ್ಯವಿಲ್ಲ. ಬದಲಾಗಿ ದೇಶದ ಬಡವರು, ಶೋಷಿತರು ಮತ್ತು ನಿರ್ಗತಿಕರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗುವಂತೆ ಮಾಡುವುದು ನಮ್ಮ ಜವಾಬ್ದಾರಿ. ದೇಶದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಅವಕಾಶ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.
ಯಾತ್ರೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಡಿ. ವೇದವ್ಯಾಸ ಕಾಮತ್, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಕೆ. ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಪುತ್ತೂರು ಬಿಜೆಪಿ ನಗರ ಅಧ್ಯಕ್ಷ ಶಿವಕುಮಾರ್ ಕಳ್ಳಿಮಾರ್, ಗ್ರಾಮಾಂತರ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.