ಮಂಗಳೂರು: 'ಕುಡುಪುವಿನಲ್ಲಿ ಗುಂಪು ಹಲ್ಲೆಯಿಂದ ಯುವಕ ಅಶ್ರಫ್ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವರು ತಮ್ಮ ಬಾಲಿಷ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಘಟಕದ ಅಧ್ಯಕ್ಷ ಅಬ್ದುಲ್ ಜಲೀಲ್ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ನೆರೆಯ ಶತ್ರು ದೇಶದ ಪರ ಜೈಕಾರ ಕೂಗಿದ ಕಾರಣಕ್ಕೆ ಆ ಯುವಕನ ಮೇಲೆ ಹಲ್ಲೆ ನಡೆದಿದೆ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಇದನ್ನು ಗಮನಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಥವಾ ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುತ್ತಿದೆಯೇ ಎಂಬ ಅನುಮಾನ ಮೂಡುತ್ತದೆ. ಸಮಾಜವಾದಿ ಸಿದ್ಧಾಂತದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಇಂತಹ ತಂಡ ಇದೆ ಎನ್ನುವುದೇ ಆಶ್ಚರ್ಯ. ಇಲ್ಲಿ ಉತ್ಸವಗಳಿದ್ದರೆ, ಬೇರೆ ಕಾರ್ಯಕ್ರಮಗಳಿದ್ದರೆ ವಿಮಾನ ಹತ್ತಿ ಬರುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಈಗ ಸಮಯ ಸಿಕ್ಕಿಲ್ಲವೇ' ಎಂದು ಪ್ರಶ್ನಿಸಿದರು.
'ಯುವಕನ ಹತ್ಯೆ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ಪತಿ ಭಾಗಿಯಾಗಿರುವ ಆರೋಪ ಇದ್ದು, ಆ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕು. ಸ್ಥಳೀಯ ಶಾಸಕರು ಆ ವ್ಯಕ್ತಿಯ ರಕ್ಷಣೆಗೆ ನಿಂತಿದ್ದಾರೆ ಎಂಬ ಮಾಹಿತಿ ನಮಗೆ ತಿಳಿದಿದೆ. ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ರಾಜ್ಯ ಸರ್ಕಾರ ಯುವಕನ ಕುಟುಂಬಕ್ಕೆ 50ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಪ್ರಮುಖರಾದ ರಿಯಾಜ್ ಕಡಂಬು, ನಿಸಾರ್ ಅಹಮ್ಮದ್, ಸಿದ್ದೀಕ್ ಬೆಂಗ್ರೆ, ಅಕ್ಟರ್ ಕುದ್ರೋಳಿ ಉಪಸ್ಥಿತರಿದ್ದರು.