ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ಭಾಗವಹಿಸಿ ಅಭ್ಯರ್ಥಿಗೆ ಸಾಥ್ ನೀಡಿದರು. ಮುಖ್ಯಮಂತ್ರಿಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಹಾಗೂ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಸ್ವಾಮಿ ಅವರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆಯ ನಂತರ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಉಮೇಶ್ ಮೇಟಿ ಅವರ ಗೆಲುವಿನ ಬಗ್ಗೆ ಪೂರ್ಣ ಭರವಸೆ ವ್ಯಕ್ತಪಡಿಸಿದರು.