ಬೆಂಗಳೂರು : 'ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಎಸ್ಡಿಪಿಐ ಅಭ್ಯರ್ಥಿಗೆ ಹಣಕಾಸು ಸಹಾಯ ಮಾಡಿದ್ದಕ್ಕೆ ದಾಖಲೆಗಳಿವೆ. ಈ ದಾಖಲೆಯನ್ನು ಕೆಪಿಸಿಸಿ ಅಧ್ಯಕ್ಷರಿಗೆ ನೀಡಿ ನಂತರ ಬಹಿರಂಗಪಡಿಸುತ್ತೇವೆ' ಎಂದು ಕಾಂಗ್ರೆಸ್ ಮುಸ್ಲಿಂ ಪದಾಧಿಕಾರಿಗಳು ಘೋಷಿಸಿದ್ದಾರೆ. ಜತೆಗೆ, 'ಜಬ್ಬಾರ್ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಬೇಕು' ಎಂದು ಆಗ್ರಹಿಸಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷರಾದ ಎ.ಆರ್.ಎಂ.ಹುಸೇನ್, ಉಬೇದುಲ್ಲಾ ಷರೀಫ್, ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷ ಸಯೀದ್ ಅಹ್ಮದ್, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಸೇರಿ ಹಲವು ಅಲ್ಪಸಂಖ್ಯಾತ ನಾಯಕರು ಸುದ್ದಿಗೋಷ್ಠಿಯಲ್ಲಿ ನಡೆಸಿ ಈ ಆಗ್ರಹ ಮಾಡಿದ್ದಾರೆ. ಇದಕ್ಕೂ ಮುನ್ನ ಸಭೆ ನಡೆಸಿದ ಅವರು, ದಾವಣಗೆರೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹ್ಮದ್ ವಿರುದ್ಧ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸಿ ನಿರ್ಣಯ ತೆಗೆದುಕೊಂಡರು.
ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ನಾಯಕರು, ಅಬ್ದುಲ್ ಜಬ್ಬಾರ್ ಎಸ್ಡಿಪಿಐ ಅಭ್ಯರ್ಥಿಗೆ ಹಣಕಾಸು ಸಹಾಯ ಮಾಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ಅಧ್ಯಕ್ಷರಿಗೆ ತಲುಪಿಸಿ ಬಹಿರಂಗ ಮಾಡುತ್ತೇವೆ. ಹೀಗಾಗಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎ.ಆರ್.ಎಂ.ಹುಸೇನ್, ನಾನೂ ಸೇರಿ ಒಟ್ಟು 6 ಮಂದಿ ಅಲ್ಪಸಂಖ್ಯಾತ ನಾಯಕರು ದಾವಣಗೆರೆ ದಕ್ಷಿಣ ಟಿಕೆಟ್ ಆಕಾಂಕ್ಷಿಯಾಗಿದ್ದೆವು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಬ್ದುಲ್ ಜಬ್ಬಾರ್ ಹೆಸರು ಬಿಟ್ಟು ಬೇರೆಯವರ ಹೆಸರು ಚರ್ಚೆಯೇ ಆಗಲಿಲ್ಲ. ಹೀಗಾಗಿ ಮುಸ್ಲಿಮರಿಗೆ ಅವಕಾಶ ತಪ್ಪಿತು. ಸಮರ್ಥ್ ಅವರಿಗೆ ಟಿಕೆಟ್ ದೊರೆತ ಬಳಿಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಥಳೀಯ ಮಟ್ಟದಲ್ಲಿ ನಿಂತು ಕೆಲಸ ಮಾಡಿದ್ದಾರೆ. ಆದರೆ, ಜಬ್ಬಾರ್ ತಮ್ಮ ಮನೆಯಿಂದ ಹೊರಗೆ ಬಂದಿಲ್ಲ ಎಂದು ಕಿಡಿಕಾರಿದರು.