ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಕೇವಲ ಅಧಿಕಾರದ ಹಪಾಹಪಿಯಲ್ಲಿ ತೊಡಗಿದೆಯೇ ಹೊರತು ಜನಸಾಮಾನ್ಯರ ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಗಂಭೀರ ಆರೋಪ ಕೇಳಿಬಂದಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುವಲ್ಲಿ ವಿಫಲವಾಗಿವೆ ಮತ್ತು ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಎಂದು ಟೀಕಿಸಿದ್ದಾರೆ. ಅವರು ನಗರದ ಬಿಜೆಪಿ ಕಚೇರಿಯಲ್ಲಿ ನಡೆ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿ, ರಾಜ್ಯದಲ್ಲಿ ಅಭಿವೃದ್ಧಿಯ ಚರ್ಚೆಗಿಂತ ಮುಖ್ಯಮಂತ್ರಿ ಗಾದಿಗಾಗಿ ನಡೆಯುತ್ತಿರುವ ಚರ್ಚೆಯೇ ಹೆಚ್ಚಾಗಿದೆ. ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್ ಮತ್ತು ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನದ ಪೈಪೋಟಿಯಲ್ಲಿ ಕೇಳಿಬರುತ್ತಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು, ಸಚಿವರು ಮತ್ತು ನಾಯಕರು ತಂಡೋಪತಂಡವಾಗಿ ದೆಹಲಿ ಪ್ರವಾಸ ಮಾಡುವುದರಲ್ಲೇ ನಿರತರಾಗಿದ್ದಾರೆ.
ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ.ಮಹಿಳೆಯರಿಗೆ ನೀಡಬೇಕಿದ್ದ 2,000 ರೂಪಾಯಿಗಳನ್ನು ಸರಿಯಾದ ಸಮಯಕ್ಕೆ ನೀಡದೆ ತಿಂಗಳುಗಟ್ಟಲೆ ವಿಳಂಬ ಮಾಡಿ ಜನರಿಗೆ ಮೋಸ ಮಾಡಲಾಗುತ್ತಿದೆ. ಉಚಿತ ವಿದ್ಯುತ್ ಘೋಷಿಸಿ ಈಗ ವಿದ್ಯುತ್ ದರವನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಹೊಟ್ಟೆಗೆ ಹೊಡೆಯುವ ಕೆಲಸವಾಗುತ್ತಿದೆ. ವಿದ್ಯಾನಿಧಿ ಅಥವಾ ಯುವನಿಧಿ ಯೋಜನೆಗಳು ಇನ್ನೂ ಸರಿಯಾಗಿ ಅನುಷ್ಠಾನಗೊಂಡಿಲ್ಲ. ಸರ್ಕಾರಿ ಬಸ್ಗಳ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು ಸರ್ಕಾರ ವಿಫಲವಾಗಿದೆ.
ಇತ್ತೀಚಿನ ಕ್ಯಾಬಿನೆಟ್ ಸಭೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ, ವಿಶೇಷವಾಗಿ ಮುಸ್ಲಿಂ ಕೇರಿಗಳ ಅಭಿವೃದ್ಧಿಗೆ 600 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಒಂದು ವರ್ಗದ ಓಲೈಕೆಗಾಗಿ ಸರ್ಕಾರ ಕೆಲಸ ಎಂದು ಆರೋಪಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ (SC/ST) ಕಾಲೋನಿಗಳ ಅಭಿವೃದ್ಧಿಗೆ ಇಟ್ಟಿದ್ದ ಸುಮಾರು 11,500 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ಆ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ.
ಸರ್ವರ್ ಸಮಸ್ಯೆಯಿಂದಾಗಿ ರಾಜ್ಯದ ಕಂದಾಯ ಇಲಾಖೆ ಸಂಪೂರ್ಣ ಸ್ತಬ್ದಗೊಂಡಿದೆ.
ಪಂಚಾಯತ್ಗಳಲ್ಲಿ ತೆರಿಗೆ ಪಾವತಿ, ಜನನ-ಮರಣ ಪ್ರಮಾಣಪತ್ರ ಪಡೆಯುವುದು ಮತ್ತು ಬ್ಯಾಂಕ್ ಸಾಲಕ್ಕಾಗಿ ಅಗತ್ಯವಿರುವ ದಾಖಲೆಗಳನ್ನು ಪಡೆಯಲು ಸಾರ್ವಜನಿಕರು ಪರದಾಡುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಗುತ್ತಿಗೆ ಆಧಾರಿತ ಸರ್ವೇಯರ್ಗಳು ಕಳೆದ 55 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಸುಮಾರು 10 ರಿಂದ 15 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ, ಇದರಿಂದ ಮನೆ ಕಟ್ಟುವವರಿಗೆ ಮತ್ತು 11ಇ ಸ್ಕೆಚ್ ಮಾಡಿಸುವವರಿಗೆ ಭಾರಿ ತೊಂದರೆಯಾಗಿದೆ.
ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಈ ಸಮಸ್ಯೆಗಳನ್ನು ಬಗೆಹರಿಸಬೇಕು ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ ಆಡಳಿತ ನಡೆಸಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಸಭಾ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪ್ರೇಮಾನಂದ ಶೆಟ್ಟಿ, ಸಂಜಯ್ ಪ್ರಭು, ರಮೇಶ್ ಕಂಡೆಟ್ಟು, ನಂದನ್ ಮಲ್ಯ ಮಹೇಶ್ ಜೋಗಿ ಮತ್ತು ವಸಂತ ಪೂಜಾರಿ ಉಪಸ್ಥಿತರಿದ್ದರು