ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮಿತಿಮೀರಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಸಾವಿರಾರು ಬಡವರ ಬಿಪಿಎಲ್ ಕಾರ್ಡ್ಗಳು ರದ್ದಾಗಿವೆ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಗಂಭೀರವಾಗಿ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು ಅವರ ಅಧ್ಯಕ್ಷತೆಯಲ್ಲಿ ಜರುಗಿದ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲ ವೇತನದಂತಹ ಎಲ್ಲಾ ಪಿಂಚಣಿ ಸೌಲಭ್ಯಗಳು ಸ್ಥಗಿತಗೊಂಡಿವೆ ಎಂದು ಅವರು ಕಿಡಿಕಾರಿದರು.
ಇದೇ ವೇಳೆ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಐಸಿಯು ಬೆಡ್ ಸಿಗುತ್ತಿಲ್ಲ. ಬಿಜೆಪಿ ಶಾಸಕರ ಮೇಲೆ ಸುಳ್ಳು ಕೇಸ್ ಹಾಕಲಾಗುತ್ತಿದ್ದು, ಸಂಸತ್ ಆವರಣದಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಕಾಂಗ್ರೆಸ್ಸಿಗರು ಹಿಂದೂ ಧರ್ಮದ ಅವಹೇಳನ ಮಾಡುತ್ತಿದ್ದಾರೆ. ಈ ಎಲ್ಲಾ ಅಟ್ಟಹಾಸಕ್ಕೆ ತಕ್ಕ ಉತ್ತರ ನೀಡುವ ಕಾಲ ಸಮೀಪಿಸುತ್ತಿದೆ ಎಂದು ಎಚ್ಚರಿಸಿದರು.
ಸಭೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಪೂರ್ಣಿಮಾ ಹಾಗೂ ಸುಜಿತ್ ಪ್ರತಾಪ್, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಪ್ರಮುಖರಾದ ಗಣೇಶ್ ಹೊಸಬೆಟ್ಟು ಸೇರಿದಂತೆ ಮಂಡಲದ ಪದಾಧಿಕಾರಿಗಳು, ನಿಕಟಪೂರ್ವ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರಗಳ ಪ್ರಮುಖರು ಉಪಸ್ಥಿತರಿದ್ದರು.