ಚೆನ್ನೈ : ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಮರುವಿಂಗಡಣೆ ಮಸೂದೆಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಶನಿವಾರ ಕರೆದಿದ್ದ ಸರ್ವಪಕ್ಷ ಸಂಸದರ ಸಭೆಯಲ್ಲಿ, ಉಪಸ್ಥಿತರಿದ್ದ ಸಂಸದರು ಎರಡೂ ಮಸೂದೆಗಳನ್ನು ಸರ್ವಾನುಮತದಿಂದ ವಿರೋಧಿಸಿದ್ದಾರೆ. ರಾಜ್ಯದ ಒಟ್ಟು 57 ಸಂಸದರ ಪೈಕಿ 21 ಸಂಸದರು ಮಾತ್ರ ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಸೇರಿದಂತೆ 37 ಸಂಸದರು ಸಭೆಯನ್ನು ಬಹಿಷ್ಕರಿಸಿ ಗೈರುಹಾಜರಾಗಿದ್ದರು.
ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲರೂ ಒಕ್ಕೊರಲ ನಿರ್ಧಾರ ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ಈ ಮಸೂದೆಗಳನ್ನು ಬೆಂಬಲಿಸದಿರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಸಭೆಯನ್ನು ಬಹಿಷ್ಕರಿಸಿರುವ ಕುರಿತು ಪ್ರತಿಕ್ರಿಯಿಸಿದ ಡಿಎಂಕೆ ಸಂಸದೆ ಕನಿಮೋಳಿ, ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ತಮ್ಮ ಪಕ್ಷದ ನಿಲುವು ಈಗಾಗಲೇ ಸ್ಪಷ್ಟವಾಗಿದ್ದು, ಮತ್ತೆ ಸಭೆ ಕರೆಯುವ ಅಗತ್ಯವಿರಲಿಲ್ಲ ಎಂದಿದ್ದಾರೆ. ಜೊತೆಗೆ, ಕಾವೇರಿ ಹಾಗೂ ಮೇಕೆದಾಟು ವಿವಾದದಿಂದ ಜನರ ಗಮನ ಬೇರೆಡೆ ಸೆಳೆಯಲು ಈ ಸಭೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.