ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ನಿಯಂತ್ರಿಸಲು ಸಾರ್ವಜನಿಕ ಸಾರಿಗೆ ಬಳಕೆ ಪ್ರೋತ್ಸಾಹಿಸುವುದರ ಜೊತೆಗೆ ಭವಿಷ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಮಾತ್ರ ಅನುಮತಿ ನೀಡುವುದು ಸೂಕ್ತ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಸಚಿವ ದಿನೇಶ್ ಗುಂಡೂರಾವ್, ಸಾಂಪ್ರದಾಯಿಕ ಇಂಧನ ಬಳಸುವ ವಾಹನಗಳಿಂದ ವಾಯು ಮಾಲಿನ್ಯ ಹೆಚ್ಚುತ್ತಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಂತಹ ಮಹಾನಗರಗಳಲ್ಲಿ ಅಧಿಕ ಸಂಖ್ಯೆಯಲ್ಲಿ ವಾಹನಗಳಿರುವುದರಿಂದ ಮಾಲಿನ್ಯದ ಪ್ರಮಾಣವು ಅಗಾಧವಾಗಿದೆ. ನಗರದ ಜನ ಸಾಂದ್ರತೆಯೂ ಹೆಚ್ಚಾಗಿರುವ ಕಾರಣ ಮಾಲಿನ್ಯ ಹೆಚ್ಚು ಜನರನ್ನು ಬಾಧಿಸುತ್ತಿದೆ. ವಾಯು ಮಾಲಿನ್ಯದಿಂದ ನವದೆಹಲಿಯಂತೆ ಬೆಂಗಳೂರು ನಗರ ಸಹ ಕುಖ್ಯಾತಗೊಳ್ಳುವ ಪೂರ್ವದಲ್ಲಿಯೇ ನಾವು ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.