ಬೆಂಗಳೂರು : ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ದಾಖಲೆಗಳ ಸಂಗ್ರಹಣೆ ಮಾಡುವುದು ಹಾಗೂ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತನಿಖಾಧಿಕಾರಿ ವಿಚಾರಣೆ/ ತನಿಖೆ ನಡೆಸುವುದನ್ನು ಕಾಯ್ದೆ ಸೆಕ್ಷನ್ 17(ಎ) ನ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ ತಿಳಿಸಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಪಂಚಾಯಿತಿ ಕಚೇರಿಯ 2015-16ನೇ ಸಾಲಿನಲ್ಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್.ಲಕ್ಷ್ಮೀ ಸೇರಿದಂತೆ ಇತರೆ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1983ರ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಲೋಕಾಯುಕ್ತ ಪೊಲೀಸರು ಅನಾಮಧೇಯ ದೂರು ಆಧರಿಸಿ ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸುವ ಹಾಗೂ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಮುನ್ನ ವಿವರವಾದ ಪ್ರಾಥಮಿಕ ತನಿಖೆ ನಡೆಸುವುದು, ಅಧಿಕಾರಿಗಳನ್ನು ವಿಚಾರಣೆಗೆ ಕರೆಯುವುದು ಮತ್ತು ದಾಖಲೆ ಸಂಗ್ರಹಿಸುವುದು, ದಸ್ತಾವೇಜು ನಿರ್ಮಿಸುವುದು ಕಾನೂನು ಬಾಹಿರ ಕ್ರಮ. ಅಂತಹ ಸಂಶೋಧನೆಯು ಸೆಕ್ಷನ್ 17(ಎ) ಅನ್ನು ರೂಪಿಸಿದ ಶಾಸಕಾಂಗದ ಉದ್ದೇಶವನ್ನೇ ನಿಷ್ಕ್ರಿಯಿಸಿದಂತಾಗಲಿದೆ ಎಂದು ಪೀಠ ಹೇಳಿದೆ.
ಅದರಂತೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸದೆ ಮತ್ತು ಸೆಕ್ಷನ್ 17(ಎ) ಅಡಿಯಲ್ಲಿ ಪೂರ್ವಾನುಮತಿ ಪಡೆಯದೇ ಲೋಕಾಯುಕ್ತ ಪೊಲೀಸರು ವಿವರವಾದ ವಿಚಾರಣೆ ಅಥವಾ ತನಿಖೆ ನಡೆಸಿದ್ದಾರೆ. ತನಿಖೆ ಮಾಡಬೇಕಿದ್ದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಹಾಗಾಗಿ ಪ್ರಕರಣದಲ್ಲಿ 2023ರ ಜೂ.17ರ ಮುನ್ನ ಪೂರ್ವಾನುಮತಿ ಪಡೆಯದೆ ಅರ್ಜಿದಾರರ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸಿರುವ ಎಲ್ಲಾ ಕಾರ್ಯಗಳೂ ಅನೂರ್ಜಿತವಾಗಲಿದೆ. ಅರ್ಜಿದಾರರ ವಿರುದ್ಧ ಲೋಕಾಯುಕ್ತರು ಮಾಡಿರುವುದನ್ನು ವಿಚಾರಣೆಯನ್ನು ಪ್ರಾಥಮಿಕ ವಿಚಾರಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ. ಆದರೆ, ಅರ್ಜಿದಾರರ ವಿರುದ್ಧದ ಭ್ರಷ್ಟಾಚಾರ ಆರೋಪಗಳಿದ್ದರೆ, ಆ ಬಗ್ಗೆ ತನಿಖೆ ನಡೆಸುವುದು ಅಗತ್ಯ. ಅರ್ಜಿದಾರರ ವಿರುದ್ಧದ ತನಿಖೆಗೆ ಸೆಕ್ಷನ್ 17(ಎ) ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಸದ್ಯ ಪೂರ್ವಾನುಮತಿ ದೊರೆತಿದೆ. ಆದ್ದರಿಂದ ಪ್ರಕರಣವನ್ನು ತಾರ್ತಿಕ ಅಂತ್ಯಕ್ಕೆ ಕೊಂಡೊಯ್ಯುವ ದೃಷ್ಟಿಯಿಂದ ತನಿಖೆ ನಡೆಸುವ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಗೆ ಮುಕ್ತವಾಗಿರಿಸಲಾಗಿದೆ ಎಂದು ಪೀಠ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ.
ಅರ್ಜಿದಾರೆ ಲಕ್ಷ್ಮೀ ಅವರು 2015-16ನೇ ಸಾಲಿನಲ್ಲಿ ಜಗಳೂರು ಪಟ್ಟಣ ಪಂಚಾಯಿತಿಯಲ್ಲಿ ಮುಖ್ಯ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಜಿ. ಎಸ್. ಸುರೇಂದ್ರ ಅವರು 2014-15ನೇ ಸಾಲಿನಲ್ಲಿ ಮುಖ್ಯ ಅಧಿಕಾರಿಯಾಗಿದ್ದರು. ಈ ಇಬ್ಬರ ಅವಧಿಯಲ್ಲಿಯೇ ಹೆಚ್. ಶ್ರೀನಿವಾಸ್ ಅವರು ಜ್ಯೂನಿಯರ್ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದರು. ಅವರು ಆ ಹುದ್ದೆಯಿಂದ ಬೇರೆಡೆಗೆ ವರ್ಗಾವಣೆಯಾದ ನಂತರ 2019ರ ಏ.20ರಂದು ಅನಾಮಧೇಯ ಪತ್ರವೊಂದು ಲೋಕಾಯುಕ್ತ ಪೊಲೀಸರಿಗೆ ಬಂದಿತ್ತು. 2013-ರಿಂದ 2018ರ ವರೆಗೆ ಜಗಳೂರು ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಸರ್ಕಾರದ ಕೋಟಿಗಟ್ಟಲೆ ಅನುದಾನವನ್ನು ಲೂಟಿ ಮಾಡಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿತ್ತು.
ಆ ಪತ್ರ ಆಧರಿಸಿ ಲೋಕಾಯುಕ್ತ ಪೊಲೀಸರು, ಎಫ್ಐಆರ್ ದಾಖಲಿಸದೆ ತನಿಖೆ/ವಿಚಾರಣೆ ನಡೆಸಿ ದಾಖಲೆ ಸಂಗ್ರಹಿಸಿದ್ದರು. 20203ರ ಮಾರ್ಚ್ನಲ್ಲಿ ಸೆಕ್ಷನ್ 17ಎ ಅಡಿಯಲ್ಲಿ ತನಿಖೆಗೆ ಪೂರ್ವಾನುಮತಿ ಕೋರಿ ಅರ್ಜಿದಾರರು ಕಾರ್ಯನಿರ್ವಹಿಸುತ್ತಿದ್ದ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆದಿದ್ದರು. ಅರ್ಜಿದಾರರು ಸುಮಾರು 50 ಲಕ್ಷ ರೂ. ಅವ್ಯವಹಾರ ನಡೆಸಿದ್ದಾರೆ ಎಂದು ಆ ಪತ್ರದಲ್ಲಿ ಆರೋಪಿಸಲಾಗಿತ್ತು. ಸಕ್ಷಮ ಪ್ರಾಧಿಕಾರವು 2023ರ ಜೂ.17ರಂದು ಅರ್ಜಿದಾರರ ವಿರುದ್ಧ ವಿಚಾರಣೆ/ತನಿಖೆಗೆ ಅನುಮತಿ ನೀಡಿತ್ತು. ಇದರಿಂದ ಅರ್ಜಿದಾರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.