image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರದಿಂದಲೇ ನೇರವಾಗಿ ಅರ್ಹ ಸಾಧಕರ ಆಯ್ಕೆ

ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರದಿಂದಲೇ ನೇರವಾಗಿ ಅರ್ಹ ಸಾಧಕರ ಆಯ್ಕೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿಗಳನ್ನು ಅರ್ಜಿಗಳಿಂದ ಮುಕ್ತಗೊಳಿಸಿ ಸರ್ಕಾರದಿಂದಲೇ ನೇರವಾಗಿ ಅರ್ಹ ಸಾಧಕರನ್ನು ಆಯ್ಕೆ ಮಾಡುವ ಪದ್ಧತಿಯನ್ನು ಜಾರಿಗೆ ತರಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗಂಭೀರ ಚಿಂತನೆ ನಡೆಸುತ್ತಿದೆ. "ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ" ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಬಳಿಕ ಸಚಿವರು ಮಾತನಾಡಿದರು.

"ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಇನ್ನು ಮುಂದೆ ಅರ್ಜಿ‌ಗಳನ್ನು ಸ್ವೀಕರಿಸದೆ, ಗಣ್ಯರ ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ. ಪ್ರಶಸ್ತಿಗಳನ್ನು ಕೇಳಿ ಪಡೆಯುವಂತೆ‌ ಆಗಬಾರದು.‌ ಅರ್ಹರನ್ನು ಗುರುತಿಸಿ, ಅವರ ಮನೆ ಬಾಗಿಲಿಗೆ ಪ್ರಶಸ್ತಿ ನೀಡಿ ಗೌರವಿಸುವಂತಾಗಬೇಕು. ಇದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗುತ್ತದೆ" ಎಂದು ತಂಗಡಗಿ ಅಭಿಪ್ರಾಯಪಟ್ಟರು.

"ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗುತ್ತಿತ್ತು. ಆಗ ಅಪಾರ ಪ್ರಮಾಣದ ಜನರಿಂದ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದವು. ಜಿಲ್ಲಾ ಪ್ರವಾಸಕ್ಕೆ ಹೋದರೆ ಪ್ರಶಸ್ತಿ ಅಪೇಕ್ಷಿತರ ಅರ್ಜಿ ಹಾಗೂ ದಾಖಲೆಗಳನ್ನು ಇಟ್ಟುಕೊಳ್ಳಲು ಜೊತೆಯಲ್ಲಿ ಹೆಚ್ಚುವರಿ ಕಾರನ್ನು ತೆಗೆದುಕೊಂಡು ಹೋಗುವ ಪರಿಸ್ಥಿತಿ ಇದೆ" ಎಂದು ಸಚಿವರು ತಿಳಿಸಿದರು.

"ಕಳೆದ ಬಾರಿ ಅರ್ಜಿ ಹಾಕದ ಅಂದಾಜು 25ಕ್ಕೂ ಹೆಚ್ಚು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉದಾಹರಣೆಗೆ, ಕೊಪ್ಪಳ ಜಿಲ್ಲೆಯ ವೃದ್ಧೆ ಹುಚ್ಚವ್ವ ಎಂಬವರು ತಮ್ಮ ಕೋಟ್ಯಂತರ ರೂಪಾಯಿ ‌ಬೆಲೆಬಾಳುವ ಎರಡು ಎಕರೆ ಜಾಗವನ್ನು ಶಾಲೆಗೆಂದು ನೀಡಿ ಔದಾರ್ಯತೆ ಮೆರೆದಿದ್ದರು. ಇಂತಹವರನ್ನು ಗುರುತಿಸಿ ಪ್ರಶಸ್ತಿ ನೀಡಿದ ತೃಪ್ತಿ ಇದೆ" ಎಂದು ಹೇಳಿದರು.

 "ಅರ್ಜಿ ಸ್ವೀಕರಿಸದೆ ರಾಜ್ಯೋತ್ಸವ ಪ್ರಶಸ್ತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಡಿನ‌ ಸಾಹಿತಿಗಳು ಸಮ್ಮತಿಸಿದ್ದು, ಈ ಬಗ್ಗೆ ಇನ್ನಷ್ಟು ಉತ್ತಮ ಸಲಹೆಗಳು ಬರಲಿ. ಈ ವಿಚಾರ ಸಾರ್ವಜನಿಕವಾಗಿ ಚರ್ಚೆಯಾಗಲಿ. ಇನ್ನು ಪ್ರಶಸ್ತಿ ನೀಡಿಕೆ‌ ವಿಷಯದಲ್ಲಿ ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಪರಿಪಾಲನೆ ಮಾಡುತ್ತಿದೆ.‌ ಅದನ್ನೇ ಮುಂದೆಯೂ ಕೂಡ ಮುಂದುರೆಸಲಾಗುವುದು" ಎಂದು‌ ಹೇಳಿದರು.

"ಈ ಹಿಂದೆ‌ ಅಧಿಕಾರದಲ್ಲಿದ್ದ ಸರ್ಕಾರ ಮೂರು ವರ್ಷ‌ ಯಾವುದೇ ಪ್ರಶಸ್ತಿ ನೀಡದೆ, ಕೈ ಬಿಟ್ಟಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 25 ವಿಭಾಗದಲ್ಲಿ‌ 75 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಲ್ಲದೆ,‌ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ನಿರ್ದೇಶಕರನ್ನು ನೇಮಕ ಮಾಡುವ ಮೂಲಕ ಅಕಾಡೆಮಿಗಳಿಗೆ ಶಕ್ತಿ ತುಂಬುವ ಕೆಲಸ ಆಗಿದೆ.‌ ಬೆಂಗಳೂರಿಗೆ ಮಾತ್ರ ಸಿಮೀತವಾಗಿದ್ದ ಅಕಾಡೆಮಿ ಮತ್ತು ಪ್ರಾಧಿಕಾರಗಳ ಕಾರ್ಯಕ್ರಮಗಳು ರಾಜ್ಯಾದ್ಯಂತ ನಡೆಯುತ್ತಿವೆ" ಎಂದು ಸಚಿವ ತಂಗಡಗಿ ತಿಳಿಸಿದರು.

ಸಮಾರಂಭದಲ್ಲಿ 2023ನೇ ಸಾಲಿನ ವರ್ಷದ ಗೌರವ ಪ್ರಶಸ್ತಿಯನ್ನು ಡಾ.ಸಿ.ವೀರಣ್ಣ, ಡಾ.ಶ್ರೀರಾಮ ಇಟ್ಟಣ್ಣನವರ, ಜಾಣಗೆರೆ ವೆಂಕಟರಾಮಯ್ಯ, ಎ.ಎಂ.ಮದರಿ ಹಾಗೂ ಡಾ.ಸಬಿಹಾ ಭೂಮಿಗೌಡ ಅವರಿಗೆ ಸಚಿವರು ಪ್ರದಾನ ಮಾಡಿದರು.

Category
ಕರಾವಳಿ ತರಂಗಿಣಿ