ಬೆಂಗಳೂರು : ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿರುವಂತೆ, ಹೈಕೋರ್ಟ್ ನ್ಯಾಯಮೂರ್ತಿಗಳೂ ತಮ್ಮ ಆಸ್ತಿ ವಿವರ ಘೋಷಣೆ ಮಾಡುವಂತೆ ಬೆಂಗಳೂರು ವಕೀಲರ ಸಂಘ ಆಗ್ರಹಿಸಿದೆ.
ಈ ಕುರಿತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮತ್ತಿತರರ ಪದಾಧಿಕಾರಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕೂಡಲೇ ಎಲ್ಲಾ ನ್ಯಾಯಮೂರ್ತಿಗಳ ಪೂರ್ಣಪೀಠದ ಸಭೆ ಕರೆದು, ಸಾರ್ವಜನಿಕವಾಗಿ ಆಸ್ತಿ ವಿವರಗಳನ್ನು ಘೊಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ಮಾರ್ಚ್ 24ರಂದು ನಡೆದ ಸಂಘದ ಸಭೆಯಲ್ಲಿ ನ್ಯಾಯಮೂರ್ತಿಗಳು ಆಸ್ತಿ ವಿವರ ಘೋಷಣೆ ಮಾಡುವಂತೆ ಕೋರಲು ನಿರ್ಣಯ ಕೈಗೊಳ್ಳಲಾಗಿತ್ತು. ಆನಂತರ ಸುಪ್ರೀಂ ಕೋರ್ಟ್ನ ಎಲ್ಲಾ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಘೋಷಣೆ ಮಾಡುವ ಮೂಲಕ ಪಾರದರ್ಶಕತೆ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದಾರೆ. ಅದನ್ನೇ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳೂ ಸಹ ಪಾಲನೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.