ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿ ಗಣತಿ ಕುರಿತು ಮುಂದಿನ ವಿಚಾರಣೆ ವೇಳೆಗೆ ತನ್ನ ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಸಂಪುಟದ ಸಹೋದ್ಯೋಗಿಗಳಿಂದ ಪರ- ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ನ್ಯಾಯಾಲಯದ ಮುಂದೆ ತನ್ನ ನಿಲುವನ್ನು ಇದೇ 24ರೊಳಗೆ ಸ್ಪಷ್ಟಪಡಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಸರ್ಕಾರಕ್ಕೆ ಮತ್ತೆ ತಲೆನೋವಾಗಿ ಪರಿಗಣಿಸಿದೆ.
ರಾಜ್ಯದಲ್ಲಿ ಜಾತಿ ಗಣತಿ ಪ್ರಶ್ನಿಸಿ ಶಿವರಾಜ್ ಕಣಶೆಟ್ಟಿ ಮತ್ತಿತರರು ಹಾಗೂ ಜಾತಿ ಗಣತಿ ವರದಿ ಜಾರಿ ಕೋರಿ ಮುಖ್ಯಮಂತ್ರಿ ಚಂದ್ರ ಮತ್ತಿತರರು ಸಲ್ಲಿಸಿರುವ ಐದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಜಿ.ಆರ್.ಗುರುಮಠ್, ವಿವೇಕ್ ಸುಬ್ಬಾರೆಡ್ಡಿ ಮತ್ತಿತರರು, 10 ವರ್ಷಗಳಷ್ಟು ಹಳೆಯದಾದ ಜಾತಿ ಗಣತಿ ಜಾರಿಗೆ ಸರ್ಕಾರ ಅವಸರ ಮಾಡುತ್ತಿದೆ. ಆದರೆ, ವಾಸ್ತವವಾಗಿ ಜಾತಿ ಗಣತಿ ಮಾಡುವ ಅಧಿಕಾರವೇ ರಾಜ್ಯ ಸರ್ಕಾರಕ್ಕಿಲ್ಲ. ಅಲ್ಲದೆ, ಗಣತಿ ಸಂಬಂಧ ಸುಪ್ರೀಂ ಕೋರ್ಟ್ಗೆ ನೀಡಿದ್ದ ಮುಚ್ಚಳಿಕೆಯನ್ನೂ ಸರ್ಕಾರ ಉಲ್ಲಂಘಿಸುತ್ತಿದೆ. 2002ರ ಮಾ.30ರಂದು ರೂಪಿಸಿದ ಮೀಸಲಾತಿಯನ್ನು ಮುಂದುವರಿಸುವುದಾಗಿ ಸುಪ್ರೀಂ ಕೋರ್ಟ್ ವಾಗ್ದಾನ ನೀಡಿತ್ತು. ಇದೀಗ ಅವೈಜ್ಞಾನಿಕವಾಗಿರುವ ಜಾತಿಗಣತಿ ಆಧರಿಸಿ ಮೀಸಲಾತಿ ಮರುರೂಪಿಸಲು ಮುಂದಾಗಿದೆ ಎಂದು ವಾದ ಮಂಡಿಸಿದರು.
ಅಲ್ಲದೇ ಜಾತಿಗಣತಿ ಕುರಿತು ನಿರ್ಧಾರ ಕೈಗೊಳ್ಳುವ ಕುರಿತು ಇದೇ 17ರಂದು ಸಚಿವ ಸಂಪುಟ ಸಭೆ ಚರ್ಚೆ ನಡೆಸಿದೆ. ಆದರೆ, ಆ ಸಭೆಯಲ್ಲಿನಿರ್ಧಾರ ಕೈಗೊಳ್ಳದೆ ಮೇ 2ರಂದು ಆ ಬಗ್ಗೆ ತೀರ್ಮಾನಿಸಲು ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಹಾಗಾಗಿ, ಅಧಿಕಾರವಿಲ್ಲದಿದ್ದರೂ ನಡೆಸಿರುವ ಜಾತಿ ಗಣತಿ ವರದಿಯನ್ನು ತಡೆ ಹಿಡಿಯುವಂತೆ ಮತ್ತು ಅದನ್ನು ಜಾರಿಗೊಳಿಸದಂತೆ ಆದೇಶ ಹೊರಡಿಸಬೇಕು ಎಂದು ಕೋರಿದರು.
ಅದಕ್ಕೆ ನ್ಯಾಯಪೀಠ, ಜಾತಿ ಗಣತಿ ಕುರಿತು ಸರ್ಕಾರದ ಮುಂದಿನ ವಿಚಾರಣೆ ವೇಳೆಗೆ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದು ಸೂಚನೆ ನೀಡಿ ವಿಚಾರಣೆಯನ್ನು ಏ.24 ಕ್ಕೆ ನಿಗದಿಪಡಿಸಿತು.