ಬೆಂಗಳೂರು: ಮನುಷ್ಯರಿಂದ ಮಲ ಹೊರುವ ಪದ್ದತಿ (ಮಲಗುಂಡಿಗಳ ಸ್ವಚ್ಛತೆ) ಮುಂದುವರೆಸುತ್ತಿರುವ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ರೀತಿಯ ಕಾರ್ಯಗಳಿಗೆ ಮನುಷ್ಯರ ಬಳಕೆ ಮಾಡುವುದನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ. ಆಧುನಿಕ ಯಂತ್ರೋಪಕರಣಗಳಿದ್ದರೂ ಮಲ ಗುಂಡಿಗಳನ್ನು ಸ್ವಚ್ಛಗೊಳಿಸಲು ಮನುಷ್ಯರನ್ನು ಬಳಕೆ ಮಾಡುತ್ತಿರುವ ಕ್ರಮವನ್ನು ಪ್ರಶ್ನಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)ನ ಕರ್ನಾಟಕ ಘಟಕ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ, ಸರ್ಕಾರಕ್ಕೆ ಮೌಖಿಕವಾಗಿ ತಾಕೀತು ಮಾಡಿದೆ.
ರಾಜ್ಯದಲ್ಲಿ ಎಲ್ಲ ಕೈಗಾರಿಕಾ ಹಾಗೂ ಜನವಸತಿ ಪ್ರದೇಶಗಳ ಎಸ್ಟಿಪಿಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಸಮಗ್ರ ಮಾಹಿತಿ ನೀಡುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು. ಜೊತೆಗೆ, ಇಡೀ ರಾಜ್ಯದಲ್ಲಿ ಒಳಚರಂಡಿ ಮತ್ತು ಸಂಸ್ಕರಣಾ ಘಟಕಗಳನ್ನು ಯಂತ್ರಗಳ ಮೂಲಕ ಸಚ್ಛಗೊಳಿಸಬೇಕು. ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಮನುಷ್ಯರಿಂದ ಮಲಗುಂಡಿಗಳ ಸ್ವಚ್ಛಗೊಳಿಸುವ ಪ್ರಕ್ರಿಯೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ಕಾರ್ಮಿಕರು ಸಾವನ್ನಪ್ಪುವುದನ್ನು ನಿಲ್ಲಿಸಬೇಕು ಎಂದು ಪೀಠ ತಿಳಿಸಿತು. ಯಂತ್ರೋಪಕರಣಗಳ ಬಳಕೆಗೆ ಹೆಚ್ಚು ವೆಚ್ಚವಾಗಲಿದೆ ಎಂಬ ಕಾರಣದಿಂದ ಮನಷ್ಯರನ್ನು ಬಳಸುವುದು ಸರಿಯಾದ ಕ್ರಮವಲ್ಲ. ಬಿಬಿಎಂಪಿ, ನಗರಾಭಿವೃದ್ಧಿ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿಯ ಅಧಿಕಾರಿಗಳು ಒಟ್ಟಾಗಿ ಈ ಸಮಸ್ಯೆಗಳ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಇದೇ ವೇಳೆ ಪೀಠ ಹೇಳಿತು.