ಬೆಂಗಳೂರು: ರಾಜ್ಯದಲ್ಲಿ ಬಾಲ್ಯ ವಿವಾಹದ ಪ್ರಮಾಣ ವರ್ಷಂಪ್ರತಿ ಹೆಚ್ಚುತ್ತಲೇ ಇದೆ. ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರೂ ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಇದೀಗ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ), 2025 ಕರಡು ಮಸೂದೆ ಸಿದ್ಧಪಡಿಸಿದೆ. ಆಧುನಿಕ ಕಾಲಮಾನದಲ್ಲೂ ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗು ಅವ್ಯಾಹತವಾಗಿ ಮುಂದುವರೆದಿದೆ. ಅದರಲ್ಲೂ ಕರ್ನಾಟಕದಂತಹ ಪ್ರಗತಿಪರ ರಾಜ್ಯದಲ್ಲೂ ಅನಿಷ್ಟ ಪದ್ಧತಿ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಬಾಲ್ಯ ವಿವಾಹಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ರಾಜ್ಯ ಸರ್ಕಾರ ಈ ಸಾಮಾಜಿಕ ಪಿಡುಗನ್ನು ನಿಯಂತ್ರಿಸಲು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಪ್ರತಿ ವರ್ಷ ಕ್ರಿಯಾ ಯೋಜನೆಗಳನ್ನು ರೂಪಿಸಲಾಗುತ್ತದೆ. ಆದರೆ, ವಾಸ್ತವದಲ್ಲಿ ಅದು ಯಾವುದೂ ನಿರೀಕ್ಷಿತ ಫಲ ನೀಡುತ್ತಿಲ್ಲ. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಅಂದರೆ 2021-22ರಿಂದ 2024-25ರ ವರೆಗೆ ಬರೋಬ್ಬರಿ 2,165 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 2021-22ರಲ್ಲಿ 418 ಬಾಲ್ಯ ವಿವಾಹಗಳು ನಡೆದರೆ, 2022-23ರಲ್ಲಿ 328 ಬಾಲ್ಯ ವಿವಾಹಗಳು ವರದಿಯಾಗಿವೆ. ಕಾಂಗ್ರೆಸ್ ಸರ್ಕಾರದ ಆಡಳಿತ ಆರಂಭವಾದ 2023-24ರಲ್ಲಿ ಬಾಲ್ಯ ವಿವಾಹ ಪ್ರಕರಣ 719ಕ್ಕೆ ಏರಿಕೆಯಾಗಿದೆ. 2024-25ರಲ್ಲಿ 700 ಬಾಲ್ಯವಿವಾಹಗಳು ಸೇರಿ ಕಾಂಗ್ರೆಸ್ ಆಡಳಿತದ ಎರಡು ವರ್ಷಗಳಲ್ಲೇ 1,416 ಬಾಲ್ಯ ವಿವಾಹಗಳು ಜರುಗಿವೆ.
2024-25 ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 700 ಬಾಲ್ಯ ವಿವಾಹಗಳು ನಡೆದಿವೆ. ಒಟ್ಟು 3,049 ಬಾಲ್ಯ ವಿವಾಹ ದೂರುಗಳು ಸ್ವೀಕೃತವಾಗಿವೆ. ಈ ಪೈಕಿ 2,349 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಇದರಲ್ಲಿ ಅತಿ ಹೆಚ್ಚು ಶಿವಮೊಗ್ಗ ಜಿಲ್ಲೆಯಲ್ಲಿ 79 ಬಾಲ್ಯ ವಿವಾಹಗಳು ನಡೆದಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ 78 ಬಾಲ್ಯ ವಿವಾಹ ನಡೆದಿದ್ದು, ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಚಿತ್ರದುರ್ಗದಲ್ಲಿ 74, ಬಾಗಲಕೋಟೆ ಜಿಲ್ಲೆಯಲ್ಲಿ 60, ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ 60 ಹಾಗೂ ಮಂಡ್ಯದಲ್ಲಿ 57 ಬಾಲ್ಯ ವಿವಾಹಗಳು ನಡೆದಿವೆ.
ಮೇ 31ರಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳೊಂದಿಗಿನ ಸಭೆಯಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಕುರಿತಾಗಿ ಗಂಭೀರವಾಗಿ ಚರ್ಚಿಸಲಾಗಿತ್ತು. ಸಭೆಯಲ್ಲಿ ಈ ಪಿಡುಗನ್ನು ತಡೆಯಲು ವಿಫಲವಾಗಿರುವ ಅಧಿಕಾರಿಗಳನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ, ಮುಖ್ಯಮಂತ್ರಿಗಳು ಹಾಗೂ ಕಾನೂನು ಸಚಿವರು ಮೌಖಿಕವಾಗಿ, ಬಾಲ್ಯವಿವಾಹಗಳನ್ನು ಮಾಡಲು ಪ್ರಯತ್ನ, ಸಿದ್ಧತೆ ಹಾಗೂ ನಿಶ್ಚಿತಾರ್ಥ ಮಾಡುವುದರ ವಿರುದ್ಧ ಒಂದು ವಿಧೇಯಕವನ್ನು ಸಿದ್ಧಪಡಿಸಲು ಸೂಚಿಸಿದ್ದರು. ಬಾಲ್ಯ ವಿವಾಹಕ್ಕೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಲು ಸರ್ಕಾರ ಇದೀಗ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) 2025 ಕರಡು ವಿಧೇಯಕವನ್ನು ಸಿದ್ಧಪಡಿಸಿದೆ. ರಾಜ್ಯದ ಹೊಸ ಮಸೂದೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, 2006ಗೆ ತಿದ್ದುಪಡಿ ತರಲಾಗಿದೆ.
ಹೊಸ ಕರಡು ಮಸೂದೆ ಪ್ರಕಾರ, ಬಾಲ್ಯ ವಿವಾಹಗಳನ್ನು ಮಾಡಲು ಪ್ರಯತ್ನ, ಸಿದ್ಧತೆ, ನಿಶ್ಚಿತಾರ್ಥ ಮಾಡಲು ಪ್ರಯತ್ನ ಹಾಗೂ ಸಿದ್ಧತೆ ಕೂಡ ಶಿಕ್ಷಾರ್ಹವಾಗಿದೆ. ಆ ನಿಟ್ಟಿನಲ್ಲಿ ರಾಜ್ಯದ ಪ್ರಸ್ತಾಪಿತ ಮಸೂದೆಯಲ್ಲಿ ಸೆಕ್ಷನ್ 9Aನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗುತ್ತಿದೆ. ಕೇಂದ್ರದ ಮೂಲ ಕಾಯ್ದೆಯಲ್ಲಿನ ಸೆಕ್ಷನ್ 9ರಂತೆ ಬಾಲಕಿಯ ಜೊತೆ ವಿವಾಹ ಮಾಡುವ ವಯಸ್ಕ ವ್ಯಕ್ತಿಗೆ ಶಿಕ್ಷೆ ನೀಡುವ ಅಂಶ ಇದೆ. ರಾಜ್ಯದ ಪ್ರಸ್ತಾಪಿತ ಮಸೂದೆಯಲ್ಲಿ ಹೊಸದಾಗಿ ಸೆಕ್ಷನ್ 9A ಸೇರ್ಪಡೆಗೊಳಿಸಿದ್ದು, ಬಾಲ್ಯ ವಿವಾಹಗಳನ್ನು ಮಾಡಲು ಪ್ರಯತ್ನ, ಸಿದ್ಧತೆ ಹಾಗೂ ನಿಶ್ಚಿತಾರ್ಥಕ್ಕೆ ಪ್ರಯತ್ನ ಹಾಗೂ ಸಿದ್ಧತೆ ಮಾಡುವುದು ಕೂಡ ಶಿಕ್ಷಾರ್ಹವಾಗಿರಲಿದೆ. ಅದರಂತೆ ಗರಿಷ್ಠ ಎರಡು ವರ್ಷ ಜೈಲು ಅಥವಾ 1 ಲಕ್ಷ ರೂ.ವರೆಗೆ ದಂಡ ಅಥವಾ ಎರಡೂ ಅನ್ವಯವಾಗಲಿದೆ. ಪ್ರಸ್ತಾಪಿತ ಮಸೂದೆಯಲ್ಲಿ ಬಾಲ್ಯ ವಿವಾಹವನ್ನು ನೆರವೇರಿಸುವುದರ ಜೊತೆಗೆ ಬಾಲ್ಯ ವಿವಾಹಕ್ಕೆ ಸಿದ್ಧತೆ ಮಾಡುವುದನ್ನೂ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ವರದಿಯಾಗಿದೆ.