ಶಿವಮೊಗ್ಗ: ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಕುಂಸಿ ಕ್ಲಸ್ಟರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಾಮೇನಹಳ್ಳಿ ಬಾಳೆಕೊಪ್ಪ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 14 ವರ್ಷ ವಯೋಮಿತಿ ಒಳಗಿನ ಕುಂಸಿ ಹಾರನಹಳ್ಳಿ ಚೋರಡಿ ವಲಯ ಮಟ್ಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಮಕ್ಕಳಲ್ಲೂ ಸಹ ಸಾಕಷ್ಟು ಪ್ರತಿಭೆ ಇರುತ್ತದೆ. ಶಿಕ್ಷಕರು ಹಾಗೂ ಪಾಲಕರು ಪ್ರೋತ್ಸಾಹ ನೀಡಿ ಕ್ರೀಡಾ ಆಸಕ್ತಿ ಬೆಳೆಸಬೇಕು. ಇದರಿಂದ ಅವರ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ ಎಂದು ತಿಳಿಸಿದರು. ಚಾಮೇನಹಳ್ಳಿ ಎಸ್ಡಿಎಂಸಿ ಅಧ್ಯಕ್ಷ ತುಷಾರ್ ಎಮ್ ಆರ್ ಮಾತನಾಡಿ, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸದಾ ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಹೆಚ್ಚಿನ ಅವಕಾಶಗಳಿವೆ ಎಂದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು. ಗ್ರಾಮೀಣ ಪ್ರದೇಶದ ಪ್ರತಿಭೆಗಳು ರಾಷ್ಟ್ರಮಟ್ಟದಲ್ಲಿ ಉತ್ತಮ ಸ್ಥಾನ ಹೊಂದಿದ್ದಾರೆ. ಇಲ್ಲಿ ವಿಜೇತರಾದ ಮಕ್ಕಳು ಮುಂದೆ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿಗಳನ್ನು ಗಳಿಸುವುದರ ಮುಖಾಂತರ ಸಾಧನೆ ಮಾಡಬೇಕು ಎಂದು ತಿಳಿಸಿದರು. ತಾಲೂಕು ದೈಹಿಕ ಶಿಕ್ಷಕ ಪರಿವೀಕ್ಷಕ ಚಂದ್ರಕಾಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿನೇಶ್, ಬಾಳೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ಗುತ್ತೇಶ್, ಉಪಾಧ್ಯಕ್ಷ ಹನುಮಂತಪ್ಪ, ಆಶಾ ಬಾಗೇಶ್, ಆಶಾ ಜಯಪ್ಪ, ಕವಿತಾ ವಾಸಪ್ಪ, ಪ್ರಕಾಶ್ ಧರ್ಮಪ್ಪ, ಮುಖ್ಯಶಿಕ್ಷಕ ಜಿ.ನಾಗರಾಜಪ್ಪ, ಶಿಕ್ಷಕರಾದ ಯಶೋಧ ಚಂದ್ರಶೇಖರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಜಯಪ್ಪ, ದೈಹಿಕ ಶಿಕ್ಷಕರು, ಕುಂಸಿ, ಹಾರನಹಳ್ಳಿ, ಚೋರಡಿ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.