ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೆ ಹಂತದ ಭೂಸ್ವಾಧೀನ ಪರಿಹಾರ ದರ ಆದೇಶ ಜಾರಿಗೊಳಿಸಿ ನಮ್ಮ ಸರಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75 ಸಾವಿರ ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ಪೂರ್ಣಗೊಳಿಸಲು, ಒಪ್ಪಿತ ತೀರ್ಪಿನ ಮೂಲಕ ಭೂಸ್ವಾಧೀನದ ದರವನ್ನು ಸೆ.16 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಆರ್.ಬಿ.ತಿಮ್ಮಾಪೂರ್ ತಿಳಿಸಿದ್ದಾರೆ.
ಯೋಜನೆಗೆ ಮುಳುಗಡೆಯಾಗುವ ಭೂಮಿ ವ್ಯಾಪ್ತಿಯ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ., ಒಣಭೂಮಿ ಎಕರೆಯೊಂದಕ್ಕೆ 30 ಲಕ್ಷ ರೂ. ಪರಿಹಾರ ಒದಗಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಇದೀಗ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಭೂಸ್ವಾಧೀನ, ಪುನರ್ನಿರ್ಮಾಣ, ಪುನರ್ವಸತಿ ಕಾರ್ಯಕ್ರಮಗಳಿಗೆ ಅಗತ್ಯವಿರುವ ಹೆಚ್ಚುವರಿ ಸುಮಾರು 75 ಸಾವಿರ ಕೋಟಿ ರೂ. ಮೊತ್ತವನ್ನು ನಾಲ್ಕು ಆರ್ಥಿಕ ವರ್ಷದೊಳಗೆ ಭರಿಸಲು ವಾರ್ಷಿಕವಾಗಿ ಸುಮಾರು 18 ಸಾವಿರ ಕೋಟಿ ರೂ. ಅನುದಾನವನ್ನು ಜಲಸಂಪನ್ಮೂಲ ಇಲಾಖೆಗೆ ಬಜೆಟ್ನಲ್ಲಿ ಒದಗಿಸುವುದಾಗಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. 2023ರಲ್ಲಿ ಹಿಂದಿನ ಬಿಜೆಪಿ ಸರಕಾರದಲ್ಲಿ ಪರಿಹಾರದ ಮೊತ್ತ ಒಣಭೂಮಿಗೆ 20 ಲಕ್ಷ ರೂ., ನೀರಾವರಿಗೆ 24 ಲಕ್ಷ ರೂ. ತೀರ್ಮಾನ ಮಾಡಿತ್ತು. ಆದರೆ ರೈತರು ಒಪ್ಪಿರಲಿಲ್ಲ. ಹಾಗಾಗಿ, ನಮ್ಮ ಕಾಂಗ್ರೆಸ್ ಸರಕಾರ ಬಂದ ಬಳಿಕ ರೈತ ಸಂಘಟನೆಗಳು, ಎಲ್ಲ ಪಕ್ಷದ ಶಾಸಕರೊಂದಿಗೆ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಹಲವು ಸಭೆ ನಡೆಸಿ, ಅಭಿಪ್ರಾಯ ಕ್ರೋಢೀಕರಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಎಲ್ಲರ ಅಭಿಪ್ರಾಯದಂತೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗಿತ್ತು. ಅದರಂತೆ ಅ.9ರಂದು ಅಧಿಕೃತ ಆದೇಶ ಹೊರಡಿಸುವ ಮೂಲಕ ರೈತರಿಗೆ ನೀಡಿದ ಭರವಸೆ ಈಡೇರಿಸಲಾಗಿದೆ. ನುಡಿದಂತೆ ನಡೆಯೋದು ನಮ್ಮ ಕಾಂಗ್ರೆಸ್ ಸರಕಾರ. ಇದೊಂದು ಐತಿಹಾಸಿಕ ತೀರ್ಮಾನವಾಗಿದೆ ಎಂದು ತಿಳಿಸಿದ್ದಾರೆ. ಜನರಿಗೆ ನೀಡಿದ್ದ ಭರವಸೆಯಂತೆ ಈಡೇರಿಸಲಾಗುತ್ತಿದೆ. ಯುಕೆಪಿಯಿಂದ ಸಂತ್ರಸ್ತರಾಗಲಿರುವ ಜನತೆ ತಮ್ಮ ಪರಿಕಲ್ಪನೆಯ ಜೀವನವನ್ನು ಕಟ್ಟಿಕೊಳ್ಳಲು ಪಕ್ಷಿಯಂತೆ ಕಾಯುತ್ತಿದ್ದರು. ಅವರ ಹಲವು ವರ್ಷಗಳ ಹೋರಾಟ ಸಾಕಾರಗೊಳಿಸಿದ್ದು ನಮ್ಮ ಕಾಂಗ್ರೆಸ್ ಸರಕಾರ. ಅತ್ಯಂತ ಮಾನವೀಯತೆಯ ದೃಷ್ಟಿಯಿಂದ ಜನಪರ ನಿರ್ಣಯ ಕೈಗೊಂಡಿರುವುದು ನಮ್ಮ ರೈತ ಬಾಂಧವರಿಗೆ ಸಂತಸ ತಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಚಾರಿತ್ರಿಕ ತೀರ್ಮಾನ ಕೈಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸಚಿವರು ಸೇರಿದಂತೆ ಇದಕ್ಕೆ ಕಾರಣಿಕೃತರಾದ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.