ಮಂಡ್ಯ : ಅಮೆರಿಕಾ ಮೂಲದ ಸ್ಯಾನ್ಸನ್ ಗ್ರೂಪ್ನಿಂದ ಸೆಮಿ ಕಂಡಕ್ಟರ್ ಫ್ಯಾಬ್ರಿಕೇಷನ್ ಯೂನಿಟ್ ಸ್ಥಾಪನೆಗೆ ಸಿದ್ಧಪಡಿಸದ ಕೈಗಾರಿಕಾ ಭೂಮಿ ಸದ್ಯಕ್ಕೆ ಜಿಲ್ಲೆಯಲ್ಲಿ ಲಭ್ಯವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಅವರು ನಿಯಮ 351ರಡಿಯಲ್ಲಿ ಕೇಳಿದ ಗಮನಸೆಳೆಯುವ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಅ.೩೧ರಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬರೆದಿರುವ ಪತ್ರದಲ್ಲಿ ಅಮೆರಿಕಾ ಮೂಲದ ಸ್ಯಾನ್ಸನ್ ಗ್ರೂಪ್ಗೆ ರಾಜ್ಯ ಸರ್ಕಾರದಿಂದ ಮಂಡ್ಯ ಜಿಲ್ಲೆಯ ಸುತ್ತ 100 ಎಕರೆ ಭೂಮಿಯನ್ನು ಸೆಮಿ ಕಂಡಕ್ಟರ್ ಫ್ಯಾಬ್ರಿಕೇಷನ್ ಯೂನಿಟ್ ಸ್ಥಾಪನೆಗೆ ಹಂಚಿಕೆ ಮಾಡಲು ಕೋರಿದ್ದಾರೆ. ಈ ಪ್ರಸ್ತಾವ ಪರಿಶೀಲನೆಯಲ್ಲಿರುವುದಾಗಿ ಹೇಳಿದ್ದಾರೆ. ಅಮೆರಿಕಾ ಮೂಲದ ಸ್ಯಾನ್ಸನ್ ಗ್ರೂಪ್ನ ವತಿಯಿಂದ ಯೋಜನಾ ಅನುಮೋದನೆ ಹಾಗೂ ಭೂಮಿ ಹಂಚಿಕೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಇದುವರೆಗೆ ಸಲ್ಲಿಕೆಯಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸದ್ಯಕ್ಕೆ ಮಂಡ್ಯ ಜಿಲ್ಲೆಯೊಳಗೆ ಸಿದ್ಧಪಡಿಸಿದ ಕೈಗಾರಿಕಾ ಪ್ರದೇಶದ ಭೂಮಿಯು ಲಭ್ಯವಿಲ್ಲ. ಮಂಡ್ಯ ತಾಲೂಕಿನ ನೊದೆಕೊಪ್ಪಲು ಗ್ರಾಮದಲ್ಲಿ 284,25 ಎಕರೆ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ೨೮ ಜನವರಿ 2022ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಅಂತಿಮ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ 109.04 ಎಕರೆ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು 2 ಫೆಬ್ರವರಿ 2021ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ 98.12 ಎಕರೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಉಳಿದ 10.32 ಎಕರೆ ಜಮೀನಿಗೆ ಭೂ ಪರಿಹಾರ ನೀಡುವ ಹಂತದಲ್ಲಿರುವುದಾಗಿ ವಿವರಿಸಿದ್ದಾರೆ. ನಾಗಮಂಗಲ ತಾಲೂಕಿನ ಚನ್ನಾಪುರ, ಬೀಚನಹಳ್ಳಿ, ಹಟ್ನ, ಬಿಳಗುಂದ ಗ್ರಾಮಗಳಲ್ಲಿ 1277.02 ಎಕರೆ ಜಮೀನನ್ನು ಭೂ ಸ್ವಾಧೀನಪಡಿಸಿಕೊಳ್ಳಲು ೧೪ ಆಗಸ್ಟ್ ೨೦೨೦ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ. ಅಂದಿನಿಂದಲೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ರೈತರು ಮತ್ತು ಅಧಿಸೂಚಿತ ಖಾತೆದಾರರು ವಿರೋಧಿಸುತ್ತಿರುವುದರಿಂದ ಅಂತಿಮ ಅಧಿಸೂಚನೆ ಹೊರಡಿಸುವುದಕ್ಕೆ ಸಾಧ್ಯವಾಗಿರುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯೊಳಗೆ ಸಿದ್ಧಪಡಿಸಿದ ಕೈಗಾರಿಕಾ ಪ್ರದೇಶದ ಭೂಮಿಯು ಪ್ರಸ್ತುತ ಲಭ್ಯವಿರುವುದಿಲ್ಲ. ಒಂದು ವೇಳೆ ಕಂಪನಿಯು ರಾಜ್ಯಸರ್ಕಾರಕ್ಕೆ ತನ್ನ ಯೋಜನೆಯ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿ ಅಶ್ಯಕತ ಭೂಮಿಯನ್ನು ಗುರುತಿಸಿ ಭೂಸ್ವಾಧೀನಕ್ಕೆ ಹಾಗೂ ಹಂಚಿಕೆಗೆ ಕೋಇದಲ್ಲಿ ರಾಜ್ಯಸರ್ಕಾರದಿಂದ ಅಗತ್ಯ ಬೆಂಬಲ ನೀಡಿ ಅಗತ್ಯವಿರುವ ಭೂಮಿಯನ್ನು ನಿಯಮಾನುಸಾ ಭೂಸ್ವಾಧೀನ ಮಾಡಿಕೊಡಲಾಗುವುದು ಎಂದು ಎಂ.ಬಿ.ಪಾಟೀಲ್ ಭರವಸೆ ನೀಡಿದ್ದಾರೆ.