ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ ಅವರು ತೆರೆ ಎಳೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮುಂದಿನ ಎರಡು ವರ್ಷಗಳ ಕಾಲ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಅವರು ಇಂದು ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ನಿಂದ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸೂಚನೆ ಅಥವಾ ಸಂದೇಶ ಬಂದಿಲ್ಲ. ಸದ್ಯಕ್ಕೆ ಅಂತಹ ಯಾವುದೇ ಚರ್ಚೆಗಳು ಪಕ್ಷದ ವೇದಿಕೆಯಲ್ಲಿ ನಡೆಯುತ್ತಿಲ್ಲ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಸುಭದ್ರವಾಗಿದ್ದು, ಅಭಿವೃದ್ಧಿ ಕೆಲಸಗಳತ್ತ ಗಮನ ಹರಿಸುತ್ತಿದೆ ಎಂದು ತಿಳಿಸಿದರು. ಈ ಮೂಲಕ ಮುಖ್ಯಮಂತ್ರಿ ಬದಲಾವಣೆಯ ಕುರಿತು ಹರಿದಾಡುತ್ತಿದ್ದ ಊಹಾಪೋಹಗಳಿಗೆ ಗೃಹ ಸಚಿವರು ಪೂರ್ಣವಿರಾಮ ಹಾಕಿದ್ದಾರೆ.