ಚಾಮರಾಜನಗರ: ರಾಜ್ಯದ ಜನಪ್ರಿಯ ಬ್ರ್ಯಾಂಡ್ 'ನಂದಿನಿ' ಉತ್ಪನ್ನಗಳ ತಯಾರಿಕೆಗೆ ಅಗತ್ಯವಿರುವ ಎಲ್.ಪಿ.ಜಿ ಸಿಲಿಂಡರ್ಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮಾರುಕಟ್ಟೆಯಲ್ಲಿ ಎಲ್.ಪಿ.ಜಿ ಕೊರತೆ ಇರುವುದು ನಿಜವಾದರೂ, ನಂದಿನಿ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿರುವುದರಿಂದ ವಿಶೇಷ ಮನವಿ ಮೇರೆಗೆ ನಿರಂತರ ಪೂರೈಕೆ ಮಾಡಲಾಗುತ್ತಿದೆ. ಹಾಲಿನ ಉತ್ಪನ್ನಗಳ ಉತ್ಪಾದನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ ಹಾಗೂ ಬೇಸಿಗೆ ಕಾಲದಲ್ಲಿ ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದ್ದು, ಅದಕ್ಕೆ ಪೂರಕವಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.