ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಏಳು ವಿಧಾನ ಪರಿಷತ್ ಸದಸ್ಯರ ಸ್ಥಾನಗಳ ಚುನಾವಣೆಗೆ ಚುನಾವಣಾ ಆಯೋಗವು ಇಂದು ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವ ಗೋವಿಂದ ರಾಜು, ನಾಸೀರ್ ಅಹಮ್ಮದ್, ಎನ್.ನಾಗರಾಜು, ಪ್ರತಾಪ ಸಿಂಹ ನಾಯಕ್ ಕೆ, ತಿಪ್ಪಣ್ಣಪ್ಪ, ಸುನೀಲ್ ವಲ್ಯಾಪುರ ಹಾಗೂ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಅವಧಿಯು ಮುಂಬರುವ ಜೂನ್ 30ರಂದು ಕೊನೆಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತೆರವಾಗಲಿರುವ ಸ್ಥಾನಗಳನ್ನು ಭರ್ತಿ ಮಾಡಲು ಈ ಮಹತ್ವದ ಚುನಾವಣೆ ಆಯೋಜಿಸಲಾಗಿದೆ.
ಚುನಾವಣಾ ಆಯೋಗ ಪ್ರಕಟಿಸಿರುವ ಅಧಿಕೃತ ವೇಳಾಪಟ್ಟಿಯ ಪ್ರಕಾರ, ಜೂನ್ 1ರ ಸೋಮವಾರದಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದಲೇ ಪ್ರಕ್ರಿಯೆಗಳು ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದೆ. ತದನಂತರ ಜೂನ್ 9ರಂದು ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಜೂನ್ 11ರವರೆಗೆ ಕಾಲಾವಕಾಶ ನೀಡಲಾಗಿದೆ. ಜೂನ್ 18ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಜರುಗಲಿದ್ದು, ಅಂದೇ ಸಂಜೆ ಮತ ಎಣಿಕೆ ನಡೆದು ಅಧಿಕೃತವಾಗಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಈ ಚುನಾವಣೆ ಪ್ರಕಟವಾಗುತ್ತಿದ್ದಂತೆ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮತ್ತು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.