ಬೆಂಗಳೂರು : ಶಿವಮೊಗ್ಗ ಜಿಲ್ಲೆಯಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಶಿವಮೊಗ್ಗ ಲೋಕಾಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಶಿವಮೊಗ್ಗ ಜಿಲ್ಲೆಯು ಭೌಗೋಳಿಕವಾಗಿ ಮತ್ತು ಆಡಳಿತಾತ್ಮಕವಾಗಿ ಸರ್ಕ್ಯೂಟ್ ಪೀಠಕ್ಕೆ ಸರ್ವ ರೀತಿಯಲ್ಲೂ ಅರ್ಹವಾಗಿದೆ. ಇಲ್ಲಿ ಪೀಠ ಸ್ಥಾಪನೆಯಾಗುವುದರಿಂದ ಶಿವಮೊಗ್ಗ ಮಾತ್ರವಲ್ಲದೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಸೇರಿದಂತೆ ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಭಾಗದ ಜನರಿಗೆ ಮತ್ತು ನ್ಯಾಯಿಕ ವಲಯಕ್ಕೆ ಭಾರಿ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಸಂಸದರು ಒತ್ತಾಯಿಸಿದರು.
ಇದೇ ವೇಳೆ, ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಯಾಗುವವರೆಗೆ ಜಿಲ್ಲೆಯನ್ನು ಬೆಂಗಳೂರಿನ ಪ್ರಧಾನ ಪೀಠದ ವ್ಯಾಪ್ತಿಯಲ್ಲಿಯೇ ಉಳಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರಸ್ತಾವಿತ ಮಂಗಳೂರು ನ್ಯಾಯಪೀಠದ ವ್ಯಾಪ್ತಿಗೆ ಶಿವಮೊಗ್ಗವನ್ನು ಸೇರಿಸುವುದರಿಂದ ಮಲೆನಾಡು ಮತ್ತು ಮಧ್ಯ ಕರ್ನಾಟಕದ ದಾವೆದಾರರಿಗೆ ತೊಂದರೆಯಾಗಲಿದ್ದು, ಇದಕ್ಕೆ ಸ್ಥಳೀಯ ವಲಯದಲ್ಲಿ ತೀವ್ರ ವಿರೋಧವಿದೆ ಎಂಬ ಭಾವನೆಗಳನ್ನು ಅವರು ರಾಜ್ಯಪಾಲರ ಗಮನಕ್ಕೆ ತಂದರು. ಈ ಭೇಟಿಯ ಸಂದರ್ಭದಲ್ಲಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಉಪಸ್ಥಿತರಿದ್ದು, ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.
ಬಳಿಕ ಜಿಲ್ಲೆಯ ಶಾಸಕರು ಮತ್ತು ಕಾನೂನು ಪ್ರತಿನಿಧಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದರು, ಸರ್ಕ್ಯೂಟ್ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕೋರಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಸಾವಿರಾರು ರೈತರಿಗೆ ತೊಂದರೆ ನೀಡಿರುವ ಬೆಳೆ ವಿಮಾ ಪರಿಹಾರದ ವೈಪರೀತ್ಯಗಳನ್ನು ಶೀಘ್ರವಾಗಿ ಸರಿಪಡಿಸುವಂತೆಯೂ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಈ ನಿಯೋಗದಲ್ಲಿ ಶಿವಮೊಗ್ಗ ಶಾಸಕ ಚನ್ನಬಸಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ಅರುಣ್ ಡಿ.ಎಸ್., ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಸ್ವಾಮಿ, ಸಾಗರ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಗಿರೀಶ್ ಗೌಡ, ಶಿಕಾರಿಪುರ ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಉಮೇಶ್ ಸೇರಿದಂತೆ ಜಿಲ್ಲೆಯ ಹಿರಿಯ ವಕೀಲರು ಉಪಸ್ಥಿತರಿದ್ದರು. ಪೀಠ ಸ್ಥಾಪನೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕಾನೂನು ವಲಯ ಮತ್ತು ನಾಗರಿಕ ಸಮಾಜದ ಬೇಡಿಕೆಗೆ ಸಂಸದರ ಈ ಭೇಟಿಯಿಂದ ಮತ್ತಷ್ಟು ಬಲ ಸಿಕ್ಕಂತಾಗಿದೆ.