ಬೆಂಗಳೂರು : ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಕಟ್ಟುನಿಟ್ಟಿನ ನಿಯಮಾವಳಿಗಳನ್ನು ಗಾಳಿಗೆ ತೂರಿ, ಧಾರ್ಮಿಕ ಕೇಂದ್ರ ಹಾಗೂ ಖಾಸಗಿ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಮತ್ತು ಭೌತಿಕ ಪರಿಶೀಲನೆ ನಡೆಸಬೇಕಿದ್ದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓ), ತಮ್ಮ ಜವಾಬ್ದಾರಿಯನ್ನು ಮರೆತು ಮಸೀದಿಯ ಆವರಣ ಹಾಗೂ ಖಾಸಗಿ ಕಚೇರಿಯ ಮುಂಭಾಗದಲ್ಲಿ ಟೇಬಲ್ಗಳನ್ನು ಹಾಕಿಕೊಂಡು ವಿಶೇಷ ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಕಳೆದ ಎರಡು ದಿನಗಳ ಹಿಂದೆ ಮಸೀದಿಯ ಒಳಗಡೆ ರಹಸ್ಯವಾಗಿ ಎಸ್ಐಆರ್ (SIR) ಪ್ರಕ್ರಿಯೆ ಕೂಡ ನಡೆದಿದೆ ಎಂದು ಹೇಳಲಾಗುತ್ತಿದ್ದು, ಇದು ಸ್ಥಳೀಯರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಯಾವುದೇ ಅಧಿಕೃತ ಸರ್ಕಾರಿ ಪ್ರಕ್ರಿಯೆಗಳನ್ನು ಧಾರ್ಮಿಕ ಕೇಂದ್ರಗಳಲ್ಲಿ ನಡೆಸುವಂತಿಲ್ಲ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಮಾಹಿತಿ ಸಂಗ್ರಹಿಸಬೇಕು. ಆದರೆ ಬಿಟಿಎಂ ಲೇಔಟ್ನಲ್ಲಿ ಈ ನಿಯಮವನ್ನು ಸಂಪೂರ್ಣವಾಗಿ ಬ್ರೇಕ್ ಮಾಡಲಾಗಿದ್ದು, ಜನರನ್ನು ಒಂದೇ ಸೂರಿನಡಿ ಸೇರಿಸಿ ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಏರಿಯಾದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಧಾರ್ಮಿಕ ಕೇಂದ್ರದಲ್ಲಿ ಅಧಿಕೃತ ಪ್ರಕ್ರಿಯೆ ನಡೆಸುತ್ತಿದ್ದ ಬಿಎಲ್ಓ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಯಮ ಉಲ್ಲಂಘಿಸಿ ನಡೆಯುತ್ತಿದ್ದ ಈ ರಹಸ್ಯ ಕಾರ್ಯಾಚರಣೆಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಉನ್ನತ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.