image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನೌಕರರ ಬೇಡಿಕೆಗೆ ಸಿಎಂ ಸಕಾರಾತ್ಮಕ ಸ್ಪಂದನೆ: ಒಪಿಎಸ್ ಮರುಜಾರಿಗೆ ಸರ್ಕಾರ ಬದ್ಧ

ನೌಕರರ ಬೇಡಿಕೆಗೆ ಸಿಎಂ ಸಕಾರಾತ್ಮಕ ಸ್ಪಂದನೆ: ಒಪಿಎಸ್ ಮರುಜಾರಿಗೆ ಸರ್ಕಾರ ಬದ್ಧ

ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಯನ್ನು ಮರು ಜಾರಿಗೊಳಿಸುವುದು ಹಾಗೂ ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ಮತ್ತು ಭತ್ಯೆಗಳನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸರ್ಕಾರದ ಮುಂದೆ ಮಹತ್ವದ ಬೇಡಿಕೆಯನ್ನಿಟ್ಟಿದೆ. ಈ ಪ್ರಮುಖ ಬೇಡಿಕೆಗಳನ್ನು ಈಡೇರಿಸಿದ್ದಲ್ಲಿ, ರಾಜ್ಯ ಸರ್ಕಾರ ಪ್ರಸ್ತುತ ಜನಸಾಮಾನ್ಯರಿಗೆ ನೀಡುತ್ತಿರುವ 'ಗ್ಯಾರಂಟಿ ಯೋಜನೆ'ಗಳ ಲಾಭವನ್ನು ತ್ಯಾಗ ಮಾಡಲು ತಾವು ಸಿದ್ಧರಿರುವುದಾಗಿ ನೌಕರರ ಪರವಾಗಿ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಎದುರು ಬಿನ್ನವತ್ತಳೆ ಮಂಡಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 'ನಮ್ಮ ಭಿಮಾ ನದ ಅಭಿನಂದನೆ' ಕಾರ್ಯಕ್ರಮದಲ್ಲಿ ಈ ಬೆಳವಣಿಗೆ ನಡೆದಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಇದೇ ವೇದಿಕೆಯಲ್ಲಿ ನೌಕರರ ಒಕ್ಕೂಟವು ತನ್ನ ದೀರ್ಘಕಾಲದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು, ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿತು.

ನೌಕರರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, "ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸುವ ಭರವಸೆ ನೀಡಲಾಗಿತ್ತು. ನುಡಿದಂತೆ ನಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ," ಎಂದು ಆಶ್ವಾಸನೆ ನೀಡಿದರು. ಒಪಿಎಸ್ ಮರು ಜಾರಿ ಕುರಿತು ಈಗಾಗಲೇ ರಚನೆಯಾಗಿರುವ ಸಮಿತಿಯಿಂದ ವರದಿ ಬಂದ ತಕ್ಷಣವೇ, ಅದನ್ನು ಸಚಿವ ಸಂಪುಟ (ಕ್ಯಾಬಿನೆಟ್) ಸಭೆಯಲ್ಲಿ ಚರ್ಚಿಸಿ, ಬಳಿಕ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಸಿಎಂ, "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಆಡಳಿತದ ಆಧಾರಸ್ತಂಭವಾಗಿದ್ದಾರೆ. ಎಲ್ಲದಕ್ಕೂ ಒಂದು ಶುಭಕಾಲ ಹಾಗೂ ಶುಭ ಗಳಿಗೆ ಬರಬೇಕಾಗುತ್ತದೆ, ಅಲ್ಲಿಯವರೆಗೆ ನೀವೆಲ್ಲರೂ ತಾಳ್ಮೆಯಿಂದ ಇರಬೇಕು. ಸರ್ಕಾರ ಕೊಟ್ಟ ಮಾತನ್ನು ಖಂಡಿತವಾಗಿಯೂ ಉಳಿಸಿಕೊಳ್ಳಲಿದೆ. ನೌಕರರು ಕ್ಷೇಮವಾಗಿದ್ದರೆ ಇಡೀ ಆಡಳಿತ ಯಂತ್ರ ಸುಸೂತ್ರವಾಗಿ ನಡೆಯುತ್ತದೆ. ನಾವೆಲ್ಲರೂ ಒಂದೇ ಕುಟುಂಬದಂತೆ ಒಟ್ಟಾಗಿ ಜನಸೇವೆ ಮಾಡಬೇಕಿದೆ," ಎಂದು ಕರೆ ನೀಡಿದರು. ಅಲ್ಲದೆ, "ಮುಂದಿನ ಬಾರಿಯೂ ನಮ್ಮ-ನಿಮ್ಮ ಸರ್ಕಾರ ಒಟ್ಟಿಗೆ ಕೆಲಸ ಮಾಡಬೇಕು" ಎನ್ನುವ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಿದರು. ಈ ಒಪ್ಪಂದಕ್ಕೆ ವೇದಿಕೆಯಲ್ಲಿದ್ದ ನಿರ್ಮಲಾ ನಂದನಾಥ ಸ್ವಾಮೀಜಿ ಹಾಗೂ ಸಿದ್ದಲಿಂಗ ಶ್ರೀಗಳೇ ಸಾಕ್ಷಿ ಎಂದು ಸಿಎಂ ಭಾವುಕರಾಗಿ ನುಡಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, "ನಾನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿಯೇ ಸರ್ಕಾರಿ ನೌಕರರಿಗೆ ಒಪಿಎಸ್ ಜಾರಿ ಮಾಡುವ ಕುರಿತು ಚರ್ಚಿಸಿ ಭರವಸೆ ನೀಡಲಾಗಿತ್ತು. ಹೀಗಾಗಿ ಮುಖ್ಯಮಂತ್ರಿಗಳ ಹಾಗೂ ಸರ್ಕಾರದ ಮೇಲೆ ನೌಕರರು ಸಂಪೂರ್ಣ ವಿಶ್ವಾಸವಿಡಬೇಕು. ಕೊಟ್ಟ ಭರವಸೆಯನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ," ಎಂದು ಭರವಸೆ ತುಂಬಿದರು.

Category
ಕರಾವಳಿ ತರಂಗಿಣಿ