image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನೀಟ್ ಹಗರಣ : ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ಆಕ್ರೋಶ

ನೀಟ್ ಹಗರಣ : ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ಆಕ್ರೋಶ

ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪರೀಕ್ಷೆ ಹಗರಣ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಪೊಲೀಸರ ಲಾಠಿ ಪ್ರಹಾರದ ಮೂಲಕ ದಮನ ಮಾಡಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಾಂತಿಯುತವಾಗಿ ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ಯುವಜನರ ಮೇಲೆ ಬಲಪ್ರಯೋಗ ನಡೆಸಿರುವುದನ್ನು ನೋಡಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಾದಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಶಿಕ್ಷಣ ಮತ್ತು ಯುವಜನ ವಿರೋಧಿ ನೀತಿಯ ವಿರುದ್ಧ ಕರ್ನಾಟಕ ಸೇರಿದಂತೆ ಇಡೀ ದೇಶಾದ್ಯಂತ ಯುವಜನರು ಬೀದಿಗೆ ಇಳಿದು ಹೋರಾಟ ನಡೆಸುತ್ತಿದ್ದಾರೆ. ಒಬ್ಬ ಅಸಮರ್ಥ ಮತ್ತು ಭ್ರಷ್ಟ ಶಿಕ್ಷಣ ಸಚಿವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗದ ಪ್ರಧಾನಿ ಮೋದಿ ಅವರು, ತಾವೊಬ್ಬ ದುರ್ಬಲ ಹಾಗೂ ದುಷ್ಟರಕ್ಷಕ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ನೊಂದ ಅಮಾಯಕ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಕಣ್ಣೀರಿನ ಶಾಪದಿಂದಲೇ ಈ ಸರ್ಕಾರ ಪತನಗೊಳ್ಳಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ಸುಳ್ಳು ಮತ್ತು ಅಪಪ್ರಚಾರದ ಮೂಲಕ ವಿದ್ಯಾರ್ಥಿಗಳ ಆಂದೋಲನವನ್ನು ದಾರಿತಪ್ಪಿಸಲು ಯತ್ನಿಸಿದ ಕೇಂದ್ರ ಸರ್ಕಾರಕ್ಕೆ ಈಗ ಪ್ರತಿಭಟನೆಯ ಕಾವು ಹೆಚ್ಚಾದಾಗ ದಿಕ್ಕುತೋಚದಂತಾಗಿದೆ. ಕಳೆದ 12 ವರ್ಷಗಳ ಮೋದಿ ಆಡಳಿತಾವಧಿಯಲ್ಲಿ ದೇಶದ ಯುವಜನರು ಮತ್ತು ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದ್ದು, ನಿರುದ್ಯೋಗದ ಪ್ರಮಾಣ ಸಾರ್ವಕಾಲಿಕ ದಾಖಲೆ ಬರೆದಿದೆ. ಸಾಮಾನ್ಯ ಪರೀಕ್ಷೆಗಳನ್ನೂ ನ್ಯಾಯಯುತ ಹಾಗೂ ಕ್ರಮಬದ್ಧವಾಗಿ ನಡೆಸಲಾಗದಷ್ಟು ಆಡಳಿತ ವ್ಯವಸ್ಥೆ ಕುಸಿದುಬಿದ್ದಿದೆ.

ಸತ್ಯ ಮತ್ತು ನ್ಯಾಯನಿಷ್ಠ ಗಾಂಧಿವಾದಿ ಸೋನಮ್ ವಾಂಗ್ಚುಕ್ ಅವರ ಮೇಲೆಯೂ ಬಲಪ್ರಯೋಗ ನಡೆಸಿ ಉಪವಾಸ ಸತ್ಯಾಗ್ರಹ ತಡೆಯಲು ಯತ್ನಿಸಿರುವುದು ದೇಶ-ವಿದೇಶಗಳಲ್ಲೂ ಖಂಡನೆಗೆ ಗುರಿಯಾಗಿದೆ. ಮಹಾತ್ಮ ಗಾಂಧೀಜಿ ಹುಟ್ಟಿದ ರಾಜ್ಯಕ್ಕೆ ಸೇರಿದ ಪ್ರಧಾನಿ ಮೋದಿ ಅವರು ನಾಥುರಾಮ್ ಗೋಡ್ಸೆ ಅನುಯಾಯಿಯಂತೆ ವರ್ತಿಸುತ್ತಿರುವುದು ವಿಷಾದನೀಯ ಎಂದಿದ್ದಾರೆ. ನೀಟ್ ಅಕ್ರಮದ ವಿರುದ್ಧ ಈಗಾಗಲೇ ಕಾಂಗ್ರೆಸ್ ಪಕ್ಷ ಆಂದೋಲನ ಆರಂಭಿಸಿದ್ದು, ರಾಹುಲ್ ಗಾಂಧಿ ಈ ಹೋರಾಟಕ್ಕೆ ಚಾಲನೆ ನೀಡಿದ್ದಾರೆ. ತಕ್ಷಣವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ವಿದ್ಯಾರ್ಥಿ ನಾಯಕರನ್ನು ಮಾತುಕತೆಗೆ ಕರೆದು ಸಮಸ್ಯೆ ಪರಿಹರಿಸಬೇಕು, ಇಲ್ಲವಾದಲ್ಲಿ ಕೇಂದ್ರ ಸರ್ಕಾರದ ಪತನದ ಎಣಿಕೆ ಶುರುವಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.

Category
ಕರಾವಳಿ ತರಂಗಿಣಿ