ಮಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತ ನಿರಂತರ ಮುನ್ನಡೆದಿದೆ. ಸಂಶೋಧನೆಗಳ ಮೂಲಕ ವಿಜ್ಞಾನಿಗಳು ದೇಶದ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಅಪಾರ. ಯುವ ಜನತೆ ಆವಿಷ್ಕಾರ, ಸಹಯೋಗ ಮತ್ತು ನಾಯಕತ್ವವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣಕುಮಾರ್.ಶೆಟ್ಟಿ.ಎನ್. ಹೇಳಿದರು.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ವತಿಯಿಂದ ಶುಕ್ರವಾರ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಾಹ್ಯಾಕಾಶ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಕಾಲ
ವಿವಿಧ ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ದ.ಕ.ಜಿಲ್ಲಾ ರೆಡ್ಕ್ರಾಸ್ ಸೊಸೈಟಿಯ ನಿರ್ದೇಶಕ ಪಿ.ಬಿ.ಹರೀಶ್ ರೈ ಮಾತನಾಡಿ " ಚಂದ್ರಯಾನ -3 ಐತಿಹಾಸಿಕ ಸಾಧನೆಯ ನೆನಪಿಗಾಗಿ
ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ ಎಂದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಅಶೋಕ್ ಕೆ.ಆರ್. ಮಾತನಾಡಿ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಗಮನಿಸಿ, ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು 'ಎಂದರು.
ಶೈಕ್ಷಣಿಕ ಸಹಾಯಕಿ ಚಂಚಲಾಕ್ಷಿ ಸ್ವಾಗತಿಸಿ, ವೈಜ್ಞಾನಿಕ ಅಧಿಕಾರಿ ವಿಘ್ನೇಶ್ ಭಟ್ ವಂದಿಸಿದರು. ಕೇಂದ್ರದ ಕ್ಯುರೇಟರ್ ಜಗನ್ನಾಥ್ ಕಾರ್ಯಕ್ರಮ ರೂಪಿಸಿದರು.
ಬಳಿಕ ನಡೆದ ಕಾರ್ಯಾಗಾರದಲ್ಲಿ ಅಮೆಚೂರ್ ರೇಡಿಯೊ ಕ್ಲಬ್ ಅಧ್ಯಕ್ಷ ರೋಹಿತ್.ಎಸ್. ರಾವ್ ಅವರು ಹ್ಯಾಮ್ ರೇಡಿಯೊ ಬಗ್ಗೆ ಡಾ. ಪ್ರಹಾಸ್ ಅಮೀನ್ ಅವರು ಆಸ್ಟ್ರೋ ಫೋಟೊಗ್ರಾಫಿ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.