image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮುಂಗಾರು ಬೆಳೆ ವಿಮೆ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ

ಮುಂಗಾರು ಬೆಳೆ ವಿಮೆ ನೋಂದಣಿ ಅವಧಿ ಆಗಸ್ಟ್ 31ರವರೆಗೆ ವಿಸ್ತರಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿಯೊಂದು ಪ್ರಕಟವಾಗಿದ್ದು, 2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿಗೆ ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಮಳೆಯಾಶ್ರಿತ ಭತ್ತ ಬೆಳೆಯುವ ರೈತರು ಪ್ರಕೃತಿ ವಿಕೋಪಗಳು, ಅನಾವೃಷ್ಟಿ, ಪ್ರವಾಹ ಹಾಗೂ ರೋಗಬಾಧೆಗಳಿಂದ ಸಂಭವಿಸುವ ಬೆಳೆ ನಷ್ಟದಿಂದ ಆರ್ಥಿಕ ರಕ್ಷಣೆ ಪಡೆಯಲು ಈ ಯೋಜನೆಯು ಬಹುಮುಖ್ಯವಾಗಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಇಂಡಸ್ ಇಂಡ್ ಜನರಲ್ ಇನ್ಯುರೆನ್ಸ್ ಕಂಪನಿ ಲಿಮಿಟೆಡ್ (ರಿಲಯನ್ಸ್ ಜನರಲ್ ಇನ್ಯುರೆನ್ಸ್ ಕಂಪನಿ ಲಿಮಿಟೆಡ್) ಸಂಸ್ಥೆಯನ್ನು ಅಧಿಕೃತವಾಗಿ ನಿಗದಿಪಡಿಸಲಾಗಿದೆ.

ಹವಾಮಾನ ವೈಪರೀತ್ಯ ಹಾಗೂ ಅನಿರೀಕ್ಷಿತ ಬೆಳೆ ನಷ್ಟದಿಂದ ರೈತರನ್ನು ರಕ್ಷಿಸುವುದು ಮತ್ತು ಕೃಷಿ ಕಾಯಕದಲ್ಲಿ ಸ್ಥಿರತೆ ತರುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಯೋಜನೆಯ ವ್ಯಾಪ್ತಿಯಿಂದ ಯಾವುದೇ ಅರ್ಹ ರೈತರು ಹೊರಗುಳಿಯಬಾರದು ಎಂಬ ದೃಷ್ಟಿಯಿಂದ ಸರ್ಕಾರವು ನೋಂದಣಿ ಅವಧಿಯನ್ನು ವಿಸ್ತರಿಸಿದೆ. ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಸಾಲಗಾರ ಹಾಗೂ ಸಾಲರಹಿತ ರೈತರೆಲ್ಲರೂ ತಕ್ಷಣವೇ ತಮ್ಮ ಹತ್ತಿರದ ಬ್ಯಾಂಕ್ ಶಾಖೆಗಳು, ರಾಷ್ಟ್ರೀಕೃತ ಬ್ಯಾಂಕುಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ಗ್ರಾಮ ಒನ್ / ಸಿಎಸ್‌ಸಿ ಕೇಂದ್ರಗಳ ಮೂಲಕ ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಬೆಳೆಗಳಿಗೆ ವಿಮಾ ರಕ್ಷಣೆ ಪಡೆದುಕೊಳ್ಳಬಹುದು. ಅಂತಿಮ ದಿನಾಂಕದವರೆಗೆ ಕಾಯದೆ, ಜಿಲ್ಲೆಯ ಅರ್ಹ ರೈತರೆಲ್ಲರೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ಅಧಿಕೃತ ಪ್ರಕಟಣೆಯಲ್ಲಿ ಕೋರಿದ್ದಾರೆ.

Category
ಕರಾವಳಿ ತರಂಗಿಣಿ