ಮಂಗಳೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಅನುಪಮ ಸೇವೆ ಸಲ್ಲಿಸುತ್ತಿರುವ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರಿಗೆ ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಬನಶಂಕರಿಯ ಜೆ.ಎಸ್. ಪಬ್ಲಿಕ್ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್, ಬೆಂಗಳೂರು ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪತ್ರಿಕೋದ್ಯಮ ಮತ್ತು ಕ್ರೀಡಾ ಕ್ಷೇತ್ರಕ್ಕೆ ಅಂಚನ್ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.
ಅಂಕಣ ಬರಹಗಳ ಮೂಲಕ ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಅಂಚನ್ ಅವರ ಕೊಡುಗೆಯನ್ನು ಸಮಾರಂಭದಲ್ಲಿ ಗಣ್ಯರು ಶ್ಲಾಘಿಸಿದರು.
ಸಮಾರಂಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಪತ್ರಕರ್ತರು, ಕ್ರೀಡಾ ಕ್ಷೇತ್ರದ ಗಣ್ಯರು, ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಉಪಸ್ಥಿತರಿದ್ದರು.